ಡಾ. ಕಮಲಾ ಹಂಪನಾ ಸೇರಿ ಮೂವರು ಗಣ್ಯರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಪರಿಶಿಷ್ಟ ಜನಾಂಗದ ಶ್ರೇಯೋಭಿವೃದಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಮೂವರು ಗಣ್ಯರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಶುಕ್ರವಾರ ಹೇಳಿದ್ದಾರೆ.
ಕಮಲಾ ಹಂಪನಾ
ಕಮಲಾ ಹಂಪನಾ

ಬೆಂಗಳೂರು: ಪರಿಶಿಷ್ಟ ಜನಾಂಗದ ಶ್ರೇಯೋಭಿವೃದಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಮೂವರು ಗಣ್ಯರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಕಮಲಾ ಹಂಪನಾ, ಸಾಮಾಜಿಕ ಕ್ಷೇತ್ರದಲ್ಲಿ ಗುರುತರವಾಗಿ ಸೇವೆಸಲ್ಲಿಸುತ್ತಿರುವ ಓಬಳಪ್ಪ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಜಿ. ರಂಗಯ್ಯ ಅವರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.

ವಿಶ್ರಾಂತ ಕುಲಪತಿಗಳು ಹಾಗೂ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ನಿರಂಜನ್ ಎಸ್. ಆರ್. ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಈ ಮೂವರು ಗಣ್ಯರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿ ವರದಿ ನೀಡಿದ್ದು, ಸರ್ಕಾರ ಈ ವರದಿಯನ್ನು ಅಂಗೀಕರಿಸಿದೆ.

ರಾಜ್ಯ ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವು ಅಕ್ಟೋಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದ್ದು, ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಈ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದರು.

ಪ್ರತಿ ಪ್ರಶಸ್ತಿಯು ತಲಾ 20 ಗ್ರಾಂ ಚಿನ್ನದ ಪದಕ ಹಾಗು 5 ಲಕ್ಷ ರೂ. ನಗದು ಒಳಗೊಂಡಿರುತ್ತದೆ ಎಂದು ಕಾರಜೋಳ ತಿಳಿಸಿದರು.

ಪ್ರಶಸ್ತಿ ಪುರಸ್ಕೃತರ ಪರಿಚಯ
ಡಾ. ಕಮಲಾ ಹಂಪನಾ ಅವರು ಕರ್ನಾಟಕದ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದಾರೆ. ನಿರಂತರ ಪರಿಶ್ರಮ, ನಾಡುನುಡಿಯ ಬಗೆಗಿನ ಅನುಪಮ ಪ್ರೀತಿ, ಅವರ ಸಾಹಿತ್ಯಿಕ ಸಾಧನೆಯಿಂದಲೇ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ. ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯವರೆಗೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಓಬಳಪ್ಪ ಅವರು ನಿವೃತ್ತ ಕೃಷಿ ಅಧಿಕಾರಿಯಾಗಿದ್ದು, ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಆಡಳಿತಾಧಿಕಾರಿಯಾಗಿ ಹಾಗು ಹರಿಹರದ ವಾಲ್ಮೀಕಿ ಹಾಸ್ಟಲ್ ಸಮಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದಾರೆ. ವಾಲ್ಮೀಕಿ ಸಮಾದ  ಮಕ್ಕಳಿಗೆ ಶಿಕ್ಷಣದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ, ಉಚಿತ ಶಿಕ್ಷಣ ದೊರಕಿಸಿಕೊಡಲು ಅವಿರತವಾಗಿ ಶ್ರಮಿಸುತ್ತಿದ್ದಾರೆ.ಪರಿಶಿಷ್ಟ ವರ್ಗಗಳ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ. 

ಡಾ. ಜಿ. ರಂಗಯ್ಯ ಅವರು ನರರೋಗ ತಜ್ಞರಾಗಿದ್ದಾರೆ. ಅವರು  ವಿದೇಶದಲ್ಲಿ ನ್ಯೂಯಾರ್ಕ್ ಸಿಟಿ ಮೆಡಿಕಲ್ ಸೊಸೈಟಿ ಅಧ್ಯಕ್ಷರಾಗಿ, ಅಮೇರಿಕ ದೇಶದಲ್ಲಿರುವ ಇಂಡಿಯನ್ ನ್ಯೂರಾಲಜಿಸ್ಟ್ ಸಂಸ್ಥೆಯ ಕಾರ್ಯದರ್ಶಿಯಾಗಿ, ಇಂಡಿಯನ್ ನ್ಯೂರಾಲಜಿಸ್ಟ್ ನ್ಯಾಷನಲ್ ಅಸೋಸಿಯೇಷನ್ ಅಧ್ಯಕ್ಷರಾಗಿ, ನ್ಯೂಯಾರ್ಕ್‍ನ ಪ್ರತಿಷ್ಠಿತ ಸ್ಥಳಗಳಲ್ಲಿ ಸ್ಥಾಪಿಸಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸ್ಥಾಪಕ ಸಮಿತಿ ಸದಸ್ಯರಾಗಿದ್ದಾರೆ. ರಾಷ್ಟದಲ್ಲಿ  ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರವಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com