ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳ ಪರಿಸ್ಥಿತಿ ಅವಲೋಕಿಸಿಸಲು ರಾಜ್ಯ ಸಚಿವರು ಬುಧವಾರದಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
2 ತಿಂಗಳಲ್ಲಿ ರಾಜ್ಯ ಎರಡನೇ ಬಾರಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಭಾರೀ ಮಳೆಯಿಂದಾಗಿ ನೀರು ತುಂಬಿ ಹರಿಯುತ್ತಿದ್ದು, ನೂರಾರು ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿವೆ.
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಪ್ರವಾಹ ಪರಿಸ್ಥಿತಿ ಕುರಿತಂತೆ ಅಧಿಕಾರಿಗಳು ಮಾತುಕತೆ ನಡೆಸಿದ್ದು, ಮಾತುಕತೆ ಬಳಿಕ ಕಾನೂನು ಸಚಿವ ಜೆಸಿ. ಮಾಧುಸ್ವಾಮಿಯವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಪ್ರವಾಹ ಪೀಡಿತ ಜಿಲ್ಲೆಗಳಿಗೆ ಸಚಿವರುಗಳನ್ನು ನಿಯೋಜಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧರಿಸಿದ್ದು, ಬುಧವಾರದಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಸಚಿವರು ಭೇಟಿ ನೀಡಲಿದ್ದಾರೆ. ಜಿಲ್ಲೆಗಳಿಗೆ ಭೇಟಿ ನೀಡುವ ಪ್ರತೀ ಸಚಿವರೂ ಜಿಲ್ಲಾಧಿಕಾರಿಗಳೊಂದಿಗೆ ಕೂಡಿ ನೆರೆಪೀಡಿತ, ಸಂತ್ರಸ್ತರಿಗೆ ನೆರವಾಗಲಿದ್ದಾರೆಂದು ಹೇಳಿದ್ದಾರೆ.
ನೆರೆ ಪೀಡಿತರಿಗೆ ಈಗಾಗಲೇ ಪರಿಹಾರವನ್ನು ವಿಸ್ತರಿಸಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತಿದ್ದು, ತ್ವರಿತಗತಿಯ ಕಾರ್ಯಗಳಿಗೆ ಆ ಹಣವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಅಗತ್ಯ ವಸ್ತುಗಳು ಹಾಗೂ ಸೌಕರ್ಯಗಳಿಗಾಗಿ ಮತ್ತಷ್ಟು ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
2-3 ದಿನಗಳ ಬಳಿಕ ನೆರೆ ಪೀಡಿತ ಜಿಲ್ಲೆಗಳಿಂದ ಬಂದ ಪ್ರತಿಕ್ರಿಯೆಗಳ ಬಳಿಕ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು, ಧಾರವಾಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಸಂಕಷ್ಟಕ್ಕೆ ಸಿಲುಕಿದೆ ಎಂದಿದ್ದಾರೆ.
ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ಈಗಾಗಲೇ ತಡ ಮಾಡಿದ್ದು, ರಾಜ್ಯ ರೂ.35,160.81 ಕೋಟಿ ಪರಿಹಾರ ಕೇಳಿದ್ದರೂ, ಮಧ್ಯಂತರ ಪರಿಹಾರವಾಗಿ ರೂ.1,200 ಕೋಟಿ ನೀಡಿದೆ.
Advertisement