ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜಾಮೀನಿನ ಮೇರೆಗೆ ತಿಹಾರಿ ಜೈಲಿನಿಂದ ಬುಧವಾರ ಹೊರಬಂದ ನಂತರ ಇದೇ ಮೊದಲ ಬಾರಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.
ಡಿಕೆ ಶಿವಕುಮಾರ್ ಸ್ವಾಗತಿಸುವುದಕ್ಕಾಗಿ ಸಹಸ್ರಾರು ಸಂಖ್ಯೆಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದರು.ಡಿಕೆ ಶಿವಕುಮಾರ್ ನೋಡುತ್ತಿದ್ದಂತೆವಿಮಾನ ನಿಲ್ದಾಣದ ದ್ವಾರದಲ್ಲಿಯೇ ಹೂವಿನ ಸುರಿಮಳೆಗೈದ ಕಾರ್ಯಕರ್ತರು, ಭಾರೀ ಹರ್ಷೋದ್ಗಾರ, ಜೈಕಾರದೊಂದಿಗೆ, ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.
ಭಾರೀ ಗಾತ್ರದ ಹೂ, ಸೇಬಿನ ಹಾರ ಹಾಕುವ ಮೂಲಕ ತಮ್ಮ ನೆಚ್ಚಿನ ನಾಯಕನನ್ನು ಸ್ವಾಗತಿಸಿದರು.
ವಿಮಾನ ನಿಲ್ದಾಣದಿಂದ ಕ್ವೀನ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯವರೆಗೂ ತೆರೆದ ವಾಹನದ ಮೂಲಕ ಮೆರವಣಿಗೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಕರೆತರಲಾಗುತ್ತಿದೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಡಿಕೆ ಶಿವಕುಮಾರ್ ಮಾತನಾಡಲಿದ್ದಾರೆ.
ಡಿಕೆ ಶಿವಕುಮಾರ್ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಮೆರವಣಿಗೆ ಸಾಗುತ್ತಿರುವ ಮಾರ್ಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
Advertisement