ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ತಿಹಾರ್ ಜೈಲಿನಿಂದ ಬಿಡುಗಡೆ ಬಳಿಕ ಬೆಂಗಳೂರಿನಲ್ಲಿ ನಡೆದ ರೋಡ್ ಷೋ ಸಂದರ್ಭದಲ್ಲಿ ಕೋರ್ಟ್ ನಿಯಮ ಮೀರಿ ಸುಮುಟೋ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 15 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಸಾದಹಳ್ಳಿ ಗೇಟ್ ನಿಂದ ವಿಮಾನ ನಿಲ್ದಾಣದ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಬ್ಯಾನರ್ ಅಳವಡಿಸಿದ್ದರು. ಆದರೆ ಹೈಕೋರ್ಟ್ ಆದೇಶದಂತೆ ನಗರದಲ್ಲಿ ಫ್ಲೆಕ್ಸ್ ಬ್ಯಾನರ್ ಗಳನ್ನು ಅಳವಡಿಸುವಂತಿಲ್ಲ. ನಿಯಮ ಮೀರಿದ ಹಿನ್ನೆಲೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು ಮಾಡಲಾಗಿದೆ.
ಅಲ್ಲದೇ ಶನಿವಾರ ಶಿವಕುಮಾರ್ ಅವರನ್ನು ವಿಮಾನ ನಿಲ್ದಾಣದಿಂದ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಶಿವಕುಮಾರ್ ಬೆಂಬಲಿಗರು ಅಡ್ಡಿಪಡಿಸಿದ್ದಾರೆ ಎಂದು ಈಶಾನ್ಯ ವಿಭಾಗದ ಪೊಲೀಸ್ ಉಪ ಆಯುಕ್ತ ಅವರ ಅಂಗರಕ್ಷಕ ಭರಮಪ್ಪ ಸುನಾಗಾರ್ ದೂರು ದಾಖಲಿಸಿದ್ದಾರೆ. ಸುಮಾರು 15 ಜನರ ಗುಂಪು ಕಾಂಗ್ರೆಸ್ ಬಾವುಟು ಹಿಡಿದು ರಸ್ತೆಯಲ್ಲಿ ನಿಂತಿತ್ತು. ರಸ್ತೆಯಿಂದ ಪಕ್ಕಕ್ಕೆ ಸರಿಯುವಂತೆ ಸುನಾಗಾರ್ ಹೇಳಿದಾಗ ಗುಂಪು ಅವರ ಮೇಲೆ ಹಲ್ಲೆಗೆ ಮುಂದಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
Advertisement