ಹಾಸನ: ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯ ಪಟ್ಟಣದಲ್ಲಿ ನಡೆದಿದೆ.
ಅಭಿ(26) ಕೊಲೆಯಾದ ಯುವಕ. ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ತನ್ನ ಡಿಯೋ ಬೈಕಿನಲ್ಲಿ ಬರುತ್ತಿದ್ದ ಅಭಿಯನ್ನು ಮೂವರು ಯುವಕರು ನಡು ರಸ್ತೆಯಲ್ಲೇ ಅಡ್ಡಗಟ್ಟಿ ಚಾಕುವಿನಿಂದ ಇರಿದು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಅಭಿ ಕೂಡ ನಗರದಲ್ಲಿ ರೌಡಿ ಶೀಟರ್ ಆಗಿದ್ದು, ಕಳೆದ ಕೆಲ ತಿಂಗಳ ಹಿಂದೆ ವ್ಯಕ್ತಿಯೊರ್ವನನ್ನು ಕೊಲೆ ಮಾಡಿ ಜೈಲಿಗೆ ಹೋಗಿ ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ತಿಳಿದು ಬಂದಿದೆ.
ಅಭಿಯನ್ನು ಮಚ್ಚು ಹಾಗೂ ಚಾಕುವಿನಿಂದ ಇರಿದು ಗಂಭೀರವಾಗಿ ಹಲ್ಲೆ ಮಾಡಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲೆ ಸಾವನ್ನಪ್ಪಿದ್ದಾನೆ.
ಅಭಿ ಮೂಲತಃ ಚನ್ನರಾಯಪಟ್ಟಣದವನು ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸರು ಸ್ಥಳಕ್ಕೆ ಪರಿಶೀಲನೆ ನಡೆಸಿ, ತನಿಖೆ ತೀವ್ರಗೊಳಿಸಿದ್ದಾರೆ.
Advertisement