ಬಿಬಿಎಂಪಿಯಲ್ಲಿ ಅಧಿಕಾರ ವಿಕೇಂದ್ರೀಕರಣ: ಸಿಎಂ ಯಡಿಯೂರಪ್ಪ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡಲು ತೀರ್ಮಾನಿಸಲಾಗಿದ್ದು, ಜಂಟಿ ಆಯುಕ್ತರು ಮತ್ತು 8 ವಿಭಾಗಗಳ ಉಪ ಆಯುಕ್ತರಿಗೆ ಹೆಚ್ಚಿನ ಅಧಿಕಾರ....
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡಲು ತೀರ್ಮಾನಿಸಲಾಗಿದ್ದು, ಜಂಟಿ ಆಯುಕ್ತರು ಮತ್ತು 8 ವಿಭಾಗಗಳ ಉಪ ಆಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರದ ಜನಪ್ರತಿನಿಧಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ಹಾಗೂ ಸಮರ್ಥ ಆಡಳಿತ ನೀಡುವ ದೃಷ್ಟಿಯಿಂದ ಆಡಳಿತ ವಿಕೇಂದ್ರೀಕರಣಕ್ಕೆ ಒತ್ತು ನೀಡಲಾಗಿದೆ. ಮತ್ತೆ 15 ದಿನಗಳ ಒಳಗೆ ದೊಡ್ಡ ಮಟ್ಟದಲ್ಲಿ ಬೆಂಗಳೂರಿನ ಎಲ್ಲಾ ಶಾಸಕರು ಮತ್ತು ಸಂಸದರ ಸಭೆ ಕರೆದು ಚರ್ಚಿಸಲಾಗುವುದು. ಜೊತೆಗೆ ಬೆಂಗಳೂರು ನಾಗರೀಕರ ಕುಂದು ಕೊರತೆಗಳನ್ನು ಆಲಿಸಲು ಪ್ರತ್ಯೇಕ ಸಹಾಯವಾಣಿ ಸ್ಥಾಪಿಸಲಾಗುತ್ತದೆ ಎಂದರು.

ತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆಯೂ ಇಂದಿನ ಸಭೆಯಲ್ಲಿ ಚೆರ್ಚೆ ನಡೆಸಲಾಗಿದೆ. ಅಧಿಕಾರಿಗಳು ವಾರ್ಡುವಾರು ಜನ ಸಂಪರ್ಕ ಸಭೆ ನಡೆಸಲು ಸೂಚನೆ ನೀಡಲಾಗಿದ್ದು. ಅಲ್ಲಿ ಸಮಗ್ರವಾಗಿ ಸಮಾಲೋಚನೆ ನಡೆಸಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಸಿಎಂ ತಿಳಿಸಿದರು.

ಬೆಂಗಳೂರು ಸಮಗ್ರ ಅಭಿವೃದ್ದಿ ದೃಷ್ಠಿಯಿಂದ 8 ವಲಯಗಳಿಗೆ 4 ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು. ಈ ಸಂಬಂಧ ವರದಿ ನೀಡುವಂತೆ ಸಿಎಂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ತ್ಯಾಜ್ಯ ವಿಲೇವಾರಿ, ಸಂಸ್ಕರಣಾ ಘಟಕಗಳ ಸ್ಥಾಪನೆ, ವಿದ್ಯುತ್ ಉತ್ಪಾದನೆ ಸೇರಿದಂತೆ ಅಗತ್ಯ ಹಾಗೂ ವಿಶೇಷ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಕಸದಿಂದ ಉತ್ಪಾದಿಸಲಾಗುವ ಕಾಂಪೋಸ್ಟ್ ಗೊಬ್ಬರದ ದರವನ್ನು ಕಡಿಮೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರತಿ ಟನ್ ಗೊಬ್ಬರಕ್ಕೆ 3000 ರೂ ಗಳಿಂದ ಒಂದು ಸಾವಿರ ರೂ.ಗೆ ಇಳಿಸಲಾಗುವುದು. ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡದ ಗುತ್ತಿಗೆದಾರರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು. ಶೇ.10 ರಷ್ಟು ಕಸ ಸಂಸ್ಕರಣಾ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಈ ಪ್ರಮಾಣ 2000 ಟನ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com