ಬೆಂಗಳೂರು: ಕೇಂದ್ರ ಸರ್ಕಾರದ ಒಂದು ದೇಶ, ಒಂದು ಭಾಷೆ ಕಲ್ಪನೆ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೇಶದಲ್ಲಿ ಹಿಂದಿ ಹೇರಿಕೆ ಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ. ಕನ್ನಡ ಭಾಷೆಯ ಪ್ರಾಮುಖ್ಯತೆಯಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಕನ್ನಡ ಮತ್ತು ರಾಜ್ಯ ಸಂಸ್ಕೃತಿಯನ್ನು ಉತ್ತೇಜಿಸಲು ನಾವು ಕಟಿಬದ್ಧರಾಗಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.
ಕಳೆದ ಶನಿವಾರ ನಡೆದ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು 'ಒಂದು ದೇಶ, ಒಂದು ಭಾಷೆ' ಎಂಬ ಧ್ವನಿ ಎತ್ತಿದ್ದರು. ಇಡೀ ಜಗತ್ತು ಭಾರತವನ್ನು ಗುರುತಿಸಲು ಏಕಮಾತ್ರ ಭಾಷೆಯ ಅಗತ್ಯವಿದೆ. ಸದ್ಯಕ್ಕೀಗ ಇಡೀ ದೇಶವನ್ನು ಒಂದು ಭಾಷೆಯ ಅಡಿಯಲ್ಲಿ ಏಕತೆಗೊಳಿಸುವ ಶಕ್ತಿ ಹಿಂದಿ ಭಾಷೆಗೆ ಮಾತ್ರ ಇದೆ ಎಂದು ಟ್ವೀಟ್ ಮಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.
ಅಮಿತ್ ಶಾ ಅವರ ದೇಶಕ್ಕೊಂದೇ ಭಾಷೆ ಕಲ್ಪನೆಗೆ ಈಗ ರಾಜ್ಯದ ಸ್ವಪಕ್ಷೀಯ ನಾಯಕರಲ್ಲಿ ಪರ, ವಿರೋಧ ವ್ಯಕ್ತವಾಗುತ್ತಿದ್ದು, ಸಿಎಂ ಯಡಿಯೂರಪ್ಪ ಅವರು ಹಿಂದಿ ಹೇರಿಕೆಯನ್ನು ವಿರೋಧಿಸಿ ಟ್ವೀಟ್ ಮಾಡಿದ್ದಾರೆ.
Advertisement