ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಎರಡು ಜಿಲ್ಲೆಗಳಾಗಿ ರೂಪಿಸುವ ಸಂಬಂಧ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ.
ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಆನಂದ್ ಸಿಂಗ್ ಹಾಗೂ ಉಜ್ಜೈನಿಯ ಪೀಠಾಧೀಶರು, ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪ್ರತ್ಯೇಕ ವಿಜಯ ನಗರ ಜಿಲ್ಲೆ ರೂಪಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದರು.
ಇದಕ್ಕೆ ಸಮ್ಮತಿ ಸೂಚಿಸಿರುವ ಮುಖ್ಯಮಂತ್ರಿಗಳು, ಇದಕ್ಕೆ ಸಂಬಂಧಪಟ್ಟಂತೆ ಅಗತ್ಯ ಪ್ರಸ್ತಾವನೆ ಸಿದ್ದಪಡಿಸಿ ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಕಂದಾಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಬಳ್ಳಾರಿ ಜಿಲ್ಲೆ ತುಂಬಾ ವಿಸ್ತಾರವಾಗಿದ್ದು, ಒಟ್ಟು 11 ತಾಲೂಕುಗಳನ್ನು ಒಳಗೊಂಡು 3 ಕಂದಾಯ ವಿಭಾಗಗಳನ್ನು ಹೊಂದಿ ಅತಿ ದೊಡ್ಡ ಜಿಲ್ಲೆಯಾಗಿದೆ. ಕೇಂದ್ರ ಸ್ಥಾನದಿಂದ 200 ಕಿಮೀ ಅಂತರದಲ್ಲಿದ್ದು ಸಾರ್ವಜನಿಕರಿಗೆ ಜಿಲ್ಲೆಯ ಕೇಂದ್ರಕ್ಕೆ ಬಂದು ಹೋಗುವುದಕ್ಕೆ ಕಷ್ಟವಾಗುತ್ತಿದೆ. ಸಾರ್ವಜನಿಕರ ಹಿತ ದೃಷ್ಠಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ 5 ತಾಲೂಕುಗಳನ್ನು (ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು, ಮತ್ತು ಕೂಡ್ಲಗಿ )ಯನ್ನು ಉಳಿಸಿಕೊಂಡು ಉಳಿದ ಆರು ತಾಲೂಕುಗಳನ್ನು (ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ, ಹರಪ್ಪನಹಳ್ಳಿ) ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆಯನ್ನಾಗಿ ರೂಪಿಸುವುದು ಅಗತ್ಯವಿದೆ. ಈ ಹಿನ್ನಲೆಯಲ್ಲಿ ಮುಂದಿನ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸುವಂತೆ ಸಿಎಂ ಸೂಚಿಸಿದ್ದಾರೆ.
Advertisement