ಯಡಿಯೂರಪ್ಪ ಎಲ್ಲಿದ್ದೀಯಪ್ಪಾ?: ನೆರೆ ಪರಿಹಾರ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ 

ಯಡಿಯೂರಪ್ಪ ಎಲ್ಲಿದ್ದೀಯಪ್ಪಾ? ಸಂತ್ರಸ್ತರ ಗೋಳು ಕೇಳಿಸ್ತಿನೇಲ್ವಪ್ಪಾ? ಇದು ನೆರೆ ಮತ್ತು ಬರ ನಿರ್ವಹಣೆಯಲ್ಲಿನ ಸರ್ಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯ ಪರಿ.  
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಯಡಿಯೂರಪ್ಪ ಎಲ್ಲಿದ್ದೀಯಪ್ಪಾ? ಸಂತ್ರಸ್ತರ ಗೋಳು ಕೇಳಿಸ್ತಿನೇಲ್ವಪ್ಪಾ? ಇದು ನೆರೆ ಮತ್ತು ಬರ ನಿರ್ವಹಣೆಯಲ್ಲಿನ ಸರ್ಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯ ಪರಿ. 

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬುಧವಾರ ನೆರೆ ಹಾಗೂ ಬರ ನಿರ್ವಹಣೆಯಲ್ಲಿ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಕಾಂಗ್ರೆಸ್ ನಾಯಕರು, ಶಾಸಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಶಾಸಕಾಂಗ ಪರ್ಷದ ಸಭೆ ಬಳಿಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ಸಿಗರು, ನೆರೆ ಪರಿಹಾರ ಸಿಗದ ಸಂತ್ರಸ್ತರು ಹಾಗೂ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ಸಂತ್ರಸ್ತರಿಗೆ ಪರಿಹಾರ ಕೊಡಿ ಇಲ್ಲವೇ ರಾಜೀನಾಮೆ ಕೊಟ್ಟು ತೊಲಗಿ ಎಂದು ಆಗ್ರಹಿಸಿದರು. 

ಪ್ರತಿಭಟನೆ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗಗಳ 22 ಜಿಲ್ಲೆಗಳ 103 ತಾಲೂಕುಗಳು ನೆರೆಗೆ ತುತ್ತಾಗಿ ಒಂದು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಒಂದು ನಯಾಪೈಸೆ ಪರಿಹಾರ ನೀಡದೆ ನಿರ್ಲಕ್ಷ್ಯ ತೋರುತ್ತಿದೆ. ಕೇಂದ್ರ ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸಲಾಗದಷ್ಟು ದಿವಾಳಿಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇವಲ ನಾಮ್'ಕೆವಾಸ್ತೆ ಬಂದು ನೆರೆ ಪ್ರದೇಶ ವೀಕ್ಷಣೆ ಮಾಡಿ ಹೋಗಿದ್ದಾರೆ. ಸೂಕ್ತ ಪರಿಹಾರ ನೀಡಲು ವಿಫಲವಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂತ್ರಸ್ತರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಭಯದಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆಂದು ಟೀಕಿಸಿದರು. 

ಬಳಿಕ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಕೂಡಲೇ ಸಂತ್ರಸ್ತರಿಗೆ ತಲಾ ರೂ,.10 ಸಾವಿರ ತಾತ್ಕಾಲಿಕ ಪರಿಹಾ ನೀಡುವುದಾಗಿ ಘೋಷಿಸಿದ್ದರು. ಆದರೆ, ಇದು ಶೇ.20ರಷ್ಟು ಜನರಿಗೂ ತಲುಪಿಲ್ಲ. ಇನ್ನು ಮನೆಗಳನ್ನು ನಿರ್ಮಾಣ ಮಾಡಲು ರೂ.5 ಲಕ್ಷ ನೀಡಲಾಗುವುದು ಎಂಬ ಘೋಷಣೆ ಘೋಷಣೆಯಾಗಿಯೇ ಉಳಿದಿದೆ. ಯಡಿಯೂರಪ್ಪ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ. ತಮ್ಮದೇ ಪಕ್ಷಧ ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ತರುವಷ್ಟು ಅವರಿಗೆ ಸಾಮರ್ಥ್ಯ ಇಲ್ಲದಾಗಿದೆ ಎಂದು ಹೀಗಳೆದಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com