ಮೂರು ದಿನಗಳೊಳಗೆ ಕೇಂದ್ರದಿಂದ ಪ್ರವಾಹ ಪರಿಹಾರ ಹಣ ನಿರೀಕ್ಷೆ: ಬಿ ಎಸ್ ಯಡಿಯೂರಪ್ಪ
ಚಿತ್ರದುರ್ಗ: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಪುನರ್ವಸತಿಗೆ ರಾಜ್ಯ ಸರ್ಕಾರ ಮನವಿ ಮಾಡಿದ್ದ ಅನುದಾನವನ್ನು ಕೇಂದ್ರ ಸರ್ಕಾರ ಇನ್ನು ಮೂರು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಅವರು ನಿನ್ನೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿ, ರಾಜ್ಯ ಸರ್ಕಾರ ಕೇಂದ್ರದಿಂದ 2,500 ಕೋಟಿ ರೂಪಾಯಿ ಪರಿಹಾರ ಕೇಳಿದೆ. ಕೇಂದ್ರದಿಂದ ಅನುದಾನ ಬಂದ ನಂತರ ಆ ಮೊತ್ತವನ್ನು ರಸ್ತೆ, ಸೇತುವೆಗಳ ಪುನರ್ನಿರ್ಮಾಣ, ಕಟ್ಟಡ ನಿರ್ಮಾಣ ಮತ್ತು ಇತರ ಮೂಲಭೂತ ಸೌಕರ್ಯಗಳಿಗೆ ಬಳಸಿಕೊಳ್ಳಲಾಗುವುದು. ಕೇಂದ್ರದ ಅನುದಾನಕ್ಕೆ ಕಾಯದೆ ರಾಜ್ಯ ಸರ್ಕಾರ ಈಗಾಗಲೇ ಕೆಲಸ ಆರಂಭಿಸಿದೆ ಎಂದರು.
ಪ್ರವಾಹದಲ್ಲಿ ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ, ಭಾಗಶಃ ಮನೆ ಹಾಳಾದವರಿಗೆ ತಲಾ 1 ಲಕ್ಷ ರೂಪಾಯಿ ನೀಡಲಾಗಿದೆ. ಪ್ರವಾಹ ಪೀಡಿತ ಸ್ಥಳಗಳಲ್ಲಿ ಅನೇಕ ಪುನರ್ನಿರ್ಮಾಣ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ರೈತರ ಸಾಲಮನ್ನಾ ವಿಚಾರದಲ್ಲಿ, ಹಿಂದಿನ ಸರ್ಕಾರ ನಿಲ್ಲಿಸಿದಲ್ಲಿಂದ ಮುಂದುವರಿಸಲಾಗುವುದು ಎಂದು ತಿಳಿಸಿದರು.