ಚಾಮರಾಜನಗರ: ತೀವ್ರ ಅನಾರೋಗ್ಯದಿಂದಾಗಿ ರಸ್ತೆಯಲ್ಲಿ ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆಯೊಬ್ಬರನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸುವ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಅವರು ಮಾನವೀಯತೆ ಮೆರೆದಿದ್ದಾರೆ.
ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುವ ದಾರಿ ಮಧ್ಯೆ ಈ ಘಟನೆ ನಡೆದಿರುವುದಾಗಿ ವರದಿಗಳು ತಿಳಿಸಿವೆ.
ಕಾಡಿನಲ್ಲಿರುವ ದಾರಿ ಮಧ್ಯೆ ಮಹಿಳೆಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಶ್ರೀರಾಮುಲು ಅವರು ಮಹಿಳೆ ಬಿದ್ದಿರುವುದನ್ನು ಕಂಡು ಕಾರು ನಿಲ್ಲಿಸುವಂತೆ ಚಾಲಕನಿಗೆ ತಿಳಿಸಿದ್ದಾರೆ.
ಈ ವೇಳೆ ಮಹಿಳೆಗೆ ಸಹಾಯ ಮಾಡಿ, ಕೂಡಲೇ ತಮ್ಮ ಕಾರಿನಲ್ಲಿಯೇ ಮಹಿಳೆಯನ್ನು ಕರೆದುಕೊಂಡು ಹೋಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ಈ ಮಾರ್ಗದಲ್ಲಿ ವಾಹನ ಸಂಚಾರ ವಿರಳವಾಗಿರುವ ಹಿನ್ನಲೆಯಲ್ಲಿ ಮಹಿಳೆ ಸಾಕಷ್ಟು ಸಮಯದಿಂದ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದರು. ಸಚಿವರು ಸಕಾಲಕ್ಕೆ ನೆರವು ನೀಡಿದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Advertisement