ಮಾಜಿ ಕೇಂದ್ರ ಸಚಿವ ಎಂ ವಿ ರಾಜಶೇಖರನ್ ನಿಧನ: ಮುಖ್ಯಮಂತ್ರಿ ಬಿಎಸ್ ವೈ ಸೇರಿ ಗಣ್ಯರ ಸಂತಾಪ

ಬಹು ಅಂಗಾಗ ವೈಫಲ್ಯದಿಂದ ಬಳಲುತ್ರಿದ್ದ ಕೇಂದ್ರ ಸರ್ಕಾರದ ಮಾಜಿ ಸಚಿವ ಎಂ.ವಿ.ರಾಜಶೇಖರ್ ಸೋಮವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಹು ಅಂಗಾಗ ವೈಲ್ಯದಿಂದ ಬಳಲುತ್ರಿದ್ದ ಕೇಂದ್ರ ಸರ್ಕಾರದ ಮಾಜಿ ಸಚಿವ ಎಂ.ವಿ.ರಾಜಶೇಖರ್ ಸೋಮವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಅವರಿಗೆ 92 ವರ್ಷ ವಯಸ್ಸಾಗಿತ್ತು.ಅವರು ಪತ್ನಿ ಗಿರಿಜಾ ರಾಜಶೇಖರ್, ಇಬ್ಬರು ಪುತ್ರಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಎಂ. ವಿ. ರಾಜಶೇಖರನ್ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಲ್ಲದೆ ಅವರ ಅಂತಿಮ ದರ್ಶನ ಪಡೆದಿದ್ದಾರೆ. ರಾಜಶೇಖರನ್ ಅವರು ಸರಳತೆ, ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಅಳಿಯನಾದ ಅವರು, ಗ್ರಾಮೀಣ ಆರ್ಥಿಕತೆಯ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಗ್ರಾಮೀಣ ಅಭಿವೃದ್ಧಿ ಕುರಿತು ಅಧ್ಯಯನ ಸಂಸ್ಥೆಯೊಂದನ್ನು ಸ್ಥಾಪಿಸಿದ್ದರು.


ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು
ಡಾ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆಯ ರಾಜ್ಯ ಸಚಿವರಾಗಿ ಹೊಣೆಗಾರಿಕೆ ನಿಭಾಯಿಸಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.

ಮೌಲ್ಯಾಧಾರಿತ ರಾಜಕಾರಣ ದಿಂದಾಗಿಯೆ ಗುರುತಿಸಿಕೊಂಡಿದ್ದರು. ಅವರ ನಿಧನ ಅತ್ಯಂತ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗ, ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕೂಡ ರಾಜಶೇಖರನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಅವರ ನಿಧನಕ್ಕೆ ಸರ್ಕಾರದಿಂದ ಸಂತಾಪ ವ್ಯಕ್ತಪಡಿಸಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಿದೆ. ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಡಿಮೆ ಪೊಲೀಸರನ್ನು ನಿಯೋಜಿಸಿ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಮಾಡಲಾಗಿದೆ.
1928ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನ ಮರಳವಾಡಿಯಲ್ಲಿ ಹುಟ್ಟಿದ ಎಂ.ವಿ. ರಾಜಶೇಖರನ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನಡೆದ ಮೈಸೂರು ಚಲೋ ಚಳವಳಿಯಲ್ಲಿಯೂ ಪಾಲ್ಗೊಂಡಿದ್ದರು. ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ಹಿಂದಿನ ಯುಪಿಎ ಸರ್ಕಾರದಲ್ಲಿ ಕೇಂದ್ರದ ಸಚಿವರಾಗಿದ್ದರು.
ರಾಜಶೇಖರನ್ ನಿಧನಕ್ಕೆ ರಾಜ್ಯ, ಕೇಂದ್ರದ ಸಚಿವರು, ಮಾಜಿ ಸಚಿವರು, ವಿವಿಧ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com