ಬೆಂಗಳೂರು: ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಿರುವ ಸುಮಾರು 35 ಲಕ್ಷಕ್ಕೂ ಹೆಚ್ಚಿನ ಕಟ್ಟಡಗಳನ್ನು ಅಕ್ರಮ–ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್–19 ನಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಈ ಮೂಲಕ ಆದಾಯ ಸಂಗ್ರಹಿಸಲು ಮುಂದಾಗಿದೆ.
ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ, ನಗರಸಭೆಗಳ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಬಾಹಿರವಾಗಿ ಕಟ್ಟಿಕೊಂಡಿರುವ ಮನೆಗಳನ್ನು ಸಕ್ರಮಗೊಳಿಸಲು ಸರಕಾರ ಬಯಸಿದ್ದು, 2 ತಿಂಗಳಲ್ಲಿ ಈ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಈ ಬೆಳವಣಿಗೆ ರಾಜಧಾನಿ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ರೆವೆನ್ಯೂ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಂಡಿರುವ ಲಕ್ಷಾಂತರ ಕುಟುಂಬಗಳಲ್ಲಿ ಹೊಸ ಭರವಸೆ ಮೂಡಿಸಿದೆ.
ಸದ್ಯ ಸುಪ್ರೀಂಕೋರ್ಟ್ ಮುಂದಿರುವ ಈ ಪ್ರಕರಣದ ಇತ್ಯರ್ಥಕ್ಕೆ ತುರ್ತು ಕ್ರಮ ವಹಿಸುವ ಮೂಲಕ 2007ರಲ್ಲಿ ರೂಪುಗೊಂಡ ‘ಅಕ್ರಮ - ಸಕ್ರಮ’ ಯೋಜನೆ ಅನುಷ್ಠಾನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಿರ್ಧರಿಸಿತು.
ಪರ್ಯಾಯ ಆರ್ಥಿಕ ಮೂಲಗಳ ಹುಡುಕಾಟಕ್ಕಾಗಿ ರಚನೆಯಾಗಿರುವ ಅಧಿಕಾರಿಗಳ ಸಮಿತಿಯ ಸಲಹೆಯಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಮಾಲೀಕರಿಗೆ ಅನುಕೂಲವಾಗುವ ಜತೆಗೆ ತೆರಿಗೆ ಮತ್ತು ದಂಡದ ರೂಪದಲ್ಲಿ ಆದಾಯ ದೊರೆಯಲಿದೆ. ಬಿಡಿಎ ವ್ಯಾಪ್ತಿಯ ಅಕ್ರಮ ಆಸ್ತಿಗಳ ಸಕ್ರಮಕ್ಕೂ ಕಾನೂನು ತಿದ್ದುಪಡಿಗೆ ಈಗಾಗಲೇ
ನಿರ್ಧಾರವಾಗಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅಕ್ರಮ ಸಕ್ರಮ ಯೋಜನೆಯನ್ನು ಪ್ರಶ್ನಿಸಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅಧ್ಯಕ್ಷತೆಯ ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಸುಪ್ರಿಂಕೋರ್ಟ್ನಲ್ಲಿ ದಾವೆ ಹೂಡಿತ್ತು. ಶುಕ್ರವಾರ ನಡೆದ ಸಭೆಯಲ್ಲಿ ರಾಜೀವ್ ಚಂದ್ರಶೇಖರ್ ಅವರೂ ಹಾಜರಿದ್ದರು. ಮೊಕದ್ದಮೆಯನ್ನು ಹಿಂದಕ್ಕೆ ಪಡೆಯಲು ಅವರನ್ನು ಕೋರಲಾಯಿತು. ‘ಬಡವರಿಗೆ ಅನುಕೂಲ ಆಗುವ ಹಾಗಿದ್ದರೆ, ಅರ್ಜಿ ಹಿಂದಕ್ಕೆ ಪಡೆಯಲು ತಮ್ಮ ತಕರಾರು ಇಲ್ಲ’ ಎಂದು ಹೇಳಿದರೆಂದು ಮೂಲಗಳು ತಿಳಿಸಿವೆ.
Advertisement