ಎಸ್ಎಸ್ಎಲ್ ಸಿ ಮಕ್ಕಳಿಗೆ ಕರೆ ಮಾಡಿ ವಿಶ್ವಾಸ ತುಂಬಿದ ಸಚಿವ ಸುರೇಶ್ ಕುಮಾರ್

ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ಸ್ವತಃ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು.
ಸಚಿವ ಎಸ್. ಸುರೇಶ್ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್
Updated on

ಬೆಂಗಳೂರು: ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ಸ್ವತಃ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು.
 
ಸೋಮವಾರ ಬೆಳಗ್ಗೆ ತಮ್ಮ ಕಚೇರಿಯಿಂದ ಮಕ್ಕಳಿಗೆ ತಾವೇ ಫೋನ್ ಮೂಲಕ ಸಂಪರ್ಕಿಸಿ, ಮಕ್ಕಳ ಪರೀಕ್ಷಾ ಸಿದ್ಧತೆ, ಆರೋಗ್ಯ ಕುರಿತು ವಿಚಾರಿಸಿದರು. ಶಿಕ್ಷಣ ಇಲಾಖೆಯಿಂದ ದೂರದರ್ಶನ ಮತ್ತು ಆಕಾಶವಾಣಿ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪೂರ್ವ ಸಿದ್ಧತೆಗೆ ಮಾರ್ಗದರ್ಶಿ ತರಗತಿಗಳನ್ನು ಇಷ್ಟರಲ್ಲಿಯೇ ಪ್ರಸಾರ ಮಾಡಲಾಗುವುದು. ಇದನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಸಲಹೆ ಮಾಡಿದರು. 

ಪರೀಕ್ಷೆ ಮುಂದಕ್ಕೆ ಹೋಗಿದ್ದರಿಂದ ಮಕ್ಕಳು ಆತ್ಮವಿಶ್ವಾಸ ಕಳೆದುಕೊಳ್ಳದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದರು.ಇಲಾಖೆಯ ಆಯುಕ್ತರ ಹಂತದಿಂದ ಹಿಡಿದು ನಿರ್ದೇಶಕರು, ಉಪನಿರ್ದೇಶಕರು, ಬಿಇಒ, ಕ್ಲಸ್ಟರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರ ಹಂತದವರೆಗೂ ಎಲ್ಲರೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಸಮರೋಪಾದಿಯಲ್ಲಿ ಮಾಡಬೇಕು ಎಂದು ಸೂಚನೆ ನೀಡಿದ್ದರು. ಅದರ ಭಾಗವಾಗಿ ಇಂದು ತಾವೇ ಮಕ್ಕಳೊಂದಿಗೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದ್ದು ವಿಶೇಷವಾಗಿತ್ತು. 

ಬಳ್ಳಾರಿ, ಕೊಪ್ಪಳ, ರಾಯಚೂರು, ಬೆಂಗಳೂರು ಸೇರಿದಂತೆ  ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಸಂಪರ್ಕ ಮಾಡಿದ ಸಚಿವರು, ಅಭಿಪ್ರಾಯಗಳನ್ನು ಪಡೆದುಕೊಂಡರು. ಮಕ್ಕಳು ಸಹ ಸಚಿವರಿಗೆ ಪ್ರಶ್ನೆ ಕೇಳಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಂಡರು. ತಮ್ಮೆಲ್ಲರ ಇಚ್ಛೆಯಂತೆ ಪರೀಕ್ಷೆ ನಡೆದೇ ನಡೆಯುತ್ತದೆ, ಯಾವುದೇ ವದಂತಿ ಹಾಗೂ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ಚೆನ್ನಾಗಿ ಓದಿಕೊಳ್ಳಿ ಎಂದು ಧೈರ್ಯ ತುಂಬಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com