ಎಸ್ ಎಸ್ ಎಲ್ ಸಿ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್: ಅಧಿಕಾರಿಗಳ ನಿರ್ಣಯಕ್ಕೆ ಸುರೇಶ್ ಕುಮಾರ್ ಗರಂ!

ಪ್ರಸಕ್ತ ಸಾಲಿನಲ್ಲಿ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ ನೀಡುವುದು ಉತ್ತಮ ಎಂದು ನಿರ್ಣಯ ಕೈಗೊಂಡ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ ನೀಡುವುದು ಉತ್ತಮ ಎಂದು ನಿರ್ಣಯ ಕೈಗೊಂಡ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

2019 -20 ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ನಾನಾ ಹಂತದ ಪರೀಕ್ಷೆಗಳ ಆಧಾರದ ಮೇಲೆ ಗ್ರೇಡಿಂಗ್ ಮೂಲಕ ಫಲಿತಾಂಶ ನೀಡುವುದು ಉತ್ತಮ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿಯವರಿಗೆ ಕೋರಲು ಅಭಿಪ್ರಾಯ ಪಡೆಯಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಧಾರವಾಡ ವಿಭಾಗದ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಹೇಳಿದ್ದು ಅವರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಎಸ್ಎಸ್ಎಲ್ಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಧಾರವಾಡ ವಿಭಾಗದಲ್ಲಿ 700 ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿದ್ದು 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿರುವುದರಿಂದ ಮಕ್ಕಳಿಗೆ ಸಾರಿಗೆ ವ್ಯವಸ್ಥೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಅಸಾಧ್ಯ. ಅಲ್ಲದೇ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸುವುದು ಕೂಡ ಕಷ್ಟ. ಈ ಹಿನ್ನೆಲೆಯಲ್ಲಿ ಗ್ರೇಡಿಂಗ್ ಮೂಲಕ ಮಕ್ಕಳ ಫಲಿತಾಂಶ ನೀಡುವುದು ಉತ್ತಮ ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದರು.

ಈ ನಿರ್ಣಯದ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದನ್ನು ಗಮನಿಸಿದ ಸಚಿವರು, ಅಪರ ಆಯುಕ್ತರ ಕಾರ್ಯವ್ಯಾಪ್ತಿಗೆ ಮೀರಿದ ಸಂಗತಿ ಇದಾಗಿದೆ. ಸರ್ಕಾರದ ನೀತಿಗಳನ್ನು ಅನುಷ್ಠಾನಕ್ಕೆ ತರುವುದು ಅವರ ಕೆಲಸವಾಗಿದೆ. ಸಭೆ ನಡೆಸಿ ನಿರ್ಣಯ ಕೈಗೊಳ್ಳಲು ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅಪರ ಆಯುಕ್ತರ ನಡೆಸಿದ ಸಭೆಗೆ ನಿರ್ಣಯಕ್ಕೆ ಪ್ರಾಮುಖ್ಯತೆ ಕೊಡಬೇಕಿಲ್ಲ. ಇಂತಹ ಸಭೆಯನ್ನು ತಮ್ಮ ಕಾರ್ಯ ವ್ಯಾಪ್ತಿ ಮೀರಿ ನಡೆಸಿದ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ಜಾರಿ ಮಾಡಲು
ನಿರ್ಧರಿಸಲಾಗಿದೆ ಎಂದು ಸಚವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com