ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜುಲೈ 31ರವರೆಗೆ ವಿಸ್ತರಣೆ: ರವಿಶಂಕರ್ ಪ್ರಸಾದ್ 

ಕೋವಿಡ್  ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್​ ಪ್ರಸಾದ್​ ಅವರು ಪ್ರಕಟಿಸಿದ್ದಾರೆ.
ರವಿಶಂಕರ್ ಪ್ರಸಾದ್ ವಿಡಿಯೋ ಕಾನ್ಫರೆನ್ಸ್ ಚಿತ್ರ
ರವಿಶಂಕರ್ ಪ್ರಸಾದ್ ವಿಡಿಯೋ ಕಾನ್ಫರೆನ್ಸ್ ಚಿತ್ರ
Updated on

ಬೆಂಗಳೂರು: ಕೋವಿಡ್  ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು  ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್​ ಪ್ರಸಾದ್​ ಅವರು ಪ್ರಕಟಿಸಿದ್ದಾರೆ.

ಕೊರೊನಾ ಲಾಕ್ ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರನ್ಸ್ ನಲ್ಲಿ ರವಿ ಶಂಕರ್​ ಪ್ರಸಾದ್​ ಈ ವಿಷಯವನ್ನು ತಿಳಿಸಿದ್ದಾರೆ.

ಲಾಕ್ ಡೌನ್ ಬಳಿಕ ರಾಜ್ಯ ಐಟಿ ವಲಯ ಎದುರಿಸುತ್ತಿರುವ ಸವಾಲುಗಳು,ಕಂಡುಕೊಂಡಿರುವ ಪರಿಹಾರಗಳು ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್‌ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸದ್ಯ ಜುಲೈ 31ರ ವರೆಗೆ ವರ್ಕ್‌ ಫ್ರಮ್‌ ಹೋಂ ಸೌಲಭ್ಯ ವಿಸ್ತರಣೆ ಮಾಡಲಾಗುವುದು. ಪರಿಸ್ಥಿತಿ ನೋಡಿಕೊಂಡು ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಐಟಿ ವಲಯ ಸದ್ಯ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ರಾಜ್ಯದ ಐಟಿ ವೃತ್ತಿಪರರ ಜತೆ ಪ್ರತ್ಯೇಕ ವೀಡಿಯೋ ಕಾನ್ಫರೆನ್ಸ್‌ ನಡೆಸ ಬೇಕೆಂಬ ಡಾ. ಅಶ್ವತ್ಥನಾರಾಯಣ ಅವರ ಕೋರಿಕೆಗೂ ಸಕಾರಾತ್ಮಕವಾಗಿ ಸ್ಪಂದಿಸಿದ ರವಿ ಶಂಕರ್‌ ಪ್ರಸಾದ್‌, ಶೀಘ್ರದಲ್ಲೇ ವೀಡಿಯೋ ಕಾನ್ಫರೆನ್ಸ್‌ ನಡೆಸುವ ಭರವಸೆ ನೀಡಿದರು. 


"ಕೊವಿಡ್‌ನಂಥ ಪರಿಸ್ಥಿತಿ ಎದುರಾದಾಗ ಐಟಿ ಹಾಗೂ ಸಂಬಂಧಿತ ವಲಯಗಳು ಯಾವ ರೀತಿ ಕಾರ್ಯ ನಿರ್ವಹಿಸಬೇಕು.ವಿಪತ್ತಿನ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ, ಪರಿಹಾರ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ರಾಷ್ಟ್ರ ಮಟ್ಟದ ಕಾರ್ಯತಂತ್ರ ಸಮಿತಿ ರಚಿಸಲಾಗುವುದು ಎಂದು ಕೆಂದ್ರ ಸಚಿವರು ತಿಳಿಸಿದರು.

"ಐಟಿ ವಲಯ ಮಾತ್ರವಲ್ಲದೆ, ಎಲ್ಲ ರಾಜ್ಯಗಳು ಅನ್ವೇಷಣೆ, ಸ್ಟಾರ್ಟ್‌ಅಪ್‌ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು.ಇ-ಆಡಳಿತ, ಇ-ಪಾಸ್‌ಗಳ ಪರಿಣಾಮಕಾರಿ ಜಾರಿಗೆ ಗಮನ ಹರಿಸಲಾಗುವುದು. ಜತೆಗೆ, ಕೋವಿಡ್  ಸಮಸ್ಯೆ ಎದುರಾದಾಗಿನಿಂದ ಬಹುತೇಕ ಎಲ್ಲ ವಲಯ ಗಳ ಕೆಲಸದ ರೀತಿ ನೀತಿ ಬದಲಾಗಿದ್ದು, ಶೇ. 80ರಷ್ಟು ಐಟಿ ವೃತ್ತಿಪರರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ.ಬಹುತೇಕ ಎಲ್ಲ ಕೆಲಸ ಕಾರ್ಯಗಳು ಆನ್‌ಲೈನ್‌ ಮೂಲಕವೇ ನಡೆಯುತ್ತಿದೆ.ಇದಕ್ಕೆ ಅನುಕೂಲವಾಗುವಂತೆ ಭಾರತ್‌ ನೆಟ್‌ ಯೋಜನೆ ಮೂಲಕ ದೇಶದ ಮೂಲೆ ಮೂಲೆಗೂ ಇಂಟರ್ನೆಟ್‌ ಸಂಪರ್ಕ ಜಾಲ ಬಲಪಡಿಸಲಾಗುತ್ತದೆ ಎಂದು ರವಿ ಶಂಕರ್‌ ಪ್ರಸಾದ್‌ ಹೇಳಿದರು.

"ಮೇಕ್‌ ಇನ್‌ ಇಂಡಿಯಾ ಯೋಜನೆಗಳ ಕಾರ್ಯರೂಪಕ್ಕೆ ಇದು ಸಕಾಲ. ಕೊವಿಡ್‌ ನಂತರದಲ್ಲಿ ದೇಶದ ಆರ್ಥಿಕತೆಯ ಪುನಶ್ಚೇತನಕ್ಕೆ ಮೇಕ್‌ ಇನ್‌ ಇಂಡಿಯಾ ಯೋಜನೆಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ನಾವು ತಕ್ಕ ಮಟ್ಟಿನ ಯಶಸ್ಸು ಪಡೆದಿದ್ದರೂ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುವುದಕ್ಕೂ ಮೊದಲು ದೇಶದಲ್ಲಿ ಇದ್ದ ಮೊಬೈಲ್‌ ಉತ್ಪಾದಕ ಸಂಸ್ಥೆಗಳ ಸಂಖ್ಯೆ 2 ರಿಂದ 268ಕ್ಕೆ ಏರಿದೆ. ಮೇಕ್‌ ಇನ್‌ ಇಂಡಿಯಾ ಯೋಜನೆ ಯಶಸ್ಸಿಗೆ ಇದು ಅತ್ಯುತ್ತಮ ಉದಾಹರಣೆ," ಎಂದು ವಿವರಿಸಿದರು. 

ಕೊವಿಡ್‌ ನಂತರ ಆರೋಗ್ಯ ಸೇವೆಯಲ್ಲೂ ತಂತ್ರಜ್ಞಾನದ ಬಳಕೆ ಹೆಚ್ಚಿದ್ದು ಆನ್‌ಲೈನ್ ಆರೋಗ್ಯ ವ್ಯವಸ್ಥೆಗೆ ಹೆಚ್ಚು ಒತ್ತು ನೀಡಲಾಗಿದೆ. ಕರ್ನಾಟಕ ಸೇರಿಂದಂತೆ ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಆನ್‌ಲೈನ್‌ ಆರೋಗ್ಯ ಸೇವೆ ಉತ್ತಮ ವಾಗಿದ್ದು, ಇತರ ರಾಜ್ಯಗಳಲ್ಲೂ ಇದು ವಿಸ್ತರಣೆ ಆಗಬೇಕು ಎಂದರು. 

ಶಿಕ್ಷಣ,ಅಗತ್ಯ ವಸ್ತುಗಳ ಪೂರೈಕೆ ಮುಂತಾದ ಹಲವು ಕಾರ್ಯಗಳಲ್ಲಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂಬುದನ್ನು ಡಾ. ಅಶ್ವತ್ಥನಾರಾಯಣ ವೀಡಿಯೋ ಕಾನ್ಫರೆನ್ಸ್‌ನಲ್ಲಿ ವಿವರಿಸಿದರು. 

500ಕ್ಕೂ ಹೆಚ್ಚು ವೃತ್ತಿಪರರು 'ಆಪ್ತ ಮಿತ್ರ ಹೆಲ್ಪ್‌ಲೈನ್‌'ನ ಕಾಲ್‌ ಸೆಂಟರ್‌ನಲ್ಲಿ ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ.ಪ್ರತಿ ನಿತ್ಯ ಸುಮಾರು 50 ಸಾವಿರ ಕರೆಗಳನ್ನು ಸ್ವೀಕರಿಸಿ, ಜನರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದಾರೆ. ಇ-ಕಾಮರ್ಸ್‌ಗೆ ಪರ್ಯಾಯವಾದ ವ್ಯವಸ್ಥೆ ಕಂಡು ಕೊಂಡಿದ್ದು, ರೆಡ್‌ಜೋನ್‌ನಲ್ಲಿರುವ ಜನ ಮನೆಯಿಂದ ಹೊರ ಬರುವ ಅಗತ್ಯ ಬಾರದಂತೆ ಎಲ್ಲ ವಸ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಆಗುತ್ತಿದೆ. ದಿನಸಿ, ಹಾಲು, ಔಷಧ, ತರಕಾರಿ ಮುಂತಾದ ವಸ್ತುಗಳನ್ನು ಮನೆಗೆ ತಲುಪಿಸಲು ವಿಧಿಸುತ್ತಿರುವ ದರ ಕೇವಲ 10 ರೂಪಾಯಿ. ಒಂದೇ ರೀತಿಯ ಸೇವೆ (ಪರಿಹಾರ ಸಾಮಗ್ರಿಗಳು) ಬೇರೆ ಬೇರೆ ಇಲಾಖೆಗಳಿಂದ ಪುನರಾವರ್ತನೆ ಆಗದಂತೆ ತಡೆಯಲು ತಂತ್ರಜ್ಞಾನದ ಮೊರೆ ಹೋಗಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com