ಸಿಎಂ ಯಡಿಯೂರಪ್ಪಗೆ ಕೊರೋನಾ ಸೋಂಕು: ಗಣ್ಯರಿಂದ ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಕೆ
ಬೆಂಗಳೂರು: ಮುಖ್ಯಮಂತ್ರಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವ ವರದಿ ತಿಳಿಯುತ್ತಿದ್ದಂತೆಯೇ ಹಲವು ಗಣ್ಯರು ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಸರ್ಕಾರದ ಹಲವು ಸಚಿವರು, ಹಾಗೂ ಶಾಸಕರು, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಆಡಳಿತ ಹಾಗೂ ಪ್ರತಿಪಕ್ಷದ ನಾಯಕರು ಶೀಘ್ರ ಗುಣಮುಖರಾಗಲಿ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಹಾರೈಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ತಗುಲಿದ್ದು, ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರಗೆ ದಾಖಲಾಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಮುಖ್ಯಮಂತ್ರಿ ಅವರಿಗೆ ಇಂದು ಪಾಸಿಟಿವ್ ವರದಿ ಬಂದಿದೆ. ಆದರೆ ತಮಗೆ ಯಾವುದೆ ರೋಗ ಲಕ್ಷಣಗಳಲ್ಲಿಲ್ಲ ಆದರೂ ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಕಳೆದ ಎರಡು ದಿನಗಳಿಂದ ಯಾವುದೆ ಸಭೆ,ಸಮಾರಂಭ ನಡೆಸದಿದ್ದರೂ ಜುಲೈ 31ರಂದು ಕಸ್ತೂರಿ ರಂಗನ್ ಅವರನ್ನು ಭೇಟಿ ಮಾಡಿದ್ದರು.ಜೊತೆಗೆ ಅಂದು ಸಂಜೆ ತಮ್ಮ ನಿವಾಸದಲ್ಲಿ ಕೆಲವು ಸಚಿವರು,ಶಾಸಕರ ಜೊತೆ ಸಭೆ ನಡೆಸಿದ್ದರು.