ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಮುದಾಯ ವಿರೋಧಿ ಅವಹೇಳನಕಾರಿ ಪೋಸ್ಟ್ ನಿಂದ ಗಲಭೆ ಉಂಟಾದ ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಆ.21ರವರಗೆ ನಿಷೇಧಾಜ್ಞೆ ಮುಂದುವರೆಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಗುಪ್ತಚರ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮತ್ತೆ ಆ. 21 ರ ಬೆಳಿಗ್ಗೆ 6 ಗಂಟೆವರೆಗೆ ಸೆಕ್ಷನ್ 144(1) ಅನ್ವಯ ನಿಷೇಧಾಜ್ಞೆ ವಿಧಿಸಿ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ. ಆ.11ರಂದು ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇನ್ನು, ಆರೋಪಿಗಳ ಬಂಧನ ಕಾರ್ಯ ಮುಂದುವರೆದಿದೆ.
ಇಂತಹ ಸಂದರ್ಭದಲ್ಲಿ ನಿಷೇಧಾಜ್ಞೆ ತೆರವುಗೊಳಿಸಿದ್ದಲ್ಲಿ, ಬಂಧನಕ್ಕೊಳಬೇಕಾಗಿದ್ದ ಆರೋಪಿಗಳು ತಮ್ಮ ಬೆಂಬಲಿಗರೊಂದಿಗೆ ಹೊರಬಂದು ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಆ.18ರವರೆಗೆ ಹೇರಿದ ನಿಷೇಧಾಜ್ಞೆಯನ್ನು 21ರವರೆಗೆ ಮುಂದುವರೆಸಿ ಆದೇಶ ಹೊರಡಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
Advertisement