ಬೆಂಗಳೂರು: ಕಿಮ್ಸ್ ಘಟನೆ ನಮಗೆ ಎಚ್ಚರಿಕೆಯ ಕರೆಗಂಟೆಯಾಗಿದ್ದು, ರಾಜ್ಯದಲ್ಲಿ ಹೆಚ್ಚಿನ ಲಿಕ್ವಿಡ್ ಆಕ್ಸಿಜನ್ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಆಮ್ಲಜನಕ ಸಿಲಿಂಡರ್ ಪೂರೈಕೆಯಿಂದ ಕಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ನಡೆದ ಆತಂಕದಿಂದ ನಾವು ಕೂಡ ಪಾಠ ಕಲಿಯಬೇಕಿದೆ. ಇದು ನಮಗೆ ಎಚ್ಚರಿಕೆಯ ಕರೆಗಂಟೆಯಾಗಿದೆ. ಆದ್ದರಿಂದ ರಾಜ್ಯದಲ್ಲೇ ಹೆಚ್ಚಿನ ಲಿಕ್ವಿಡ್ ಆಕ್ಸಿಜನ್ ಘಟಕ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಆಮ್ಲಜನಕ ಕೊರತೆಯಿಂದ ರೋಗಿಗಳು ಸಂಕಷ್ಟಕ್ಕೆ ಒಳಗಾಗಿ ಆತಂಕ ಸೃಷ್ಟಿಯಾಗಿದ್ದ ಕಿಮ್ಸ್ ಆಸ್ಪತ್ರೆಗೆ ಇಂದು ವೈದ್ಯಕೀಯ ಶಿಕ್ಷ ಣ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕ್ಸಿಜನ್ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಪೂರೈಕೆದಾರರು ಸಮಯಕ್ಕೆ ಸರಿಯಾಗಿ ಕಿಮ್ಸ್ ಆಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್ ಪೂರೈಸಿರಲಿಲ್ಲ. ಇದರಿಂದ ಸ್ವಲ್ಪ ಹೊತ್ತು ಆತಂಕ ಸೃಷ್ಟಿಯಾಗಿತ್ತು. ಆದರೆ ತಕ್ಷಣ ಆಸ್ಪತ್ರೆಯವರು ಇದನ್ನು ಸರ್ಕಾರದ ಗಮನಕ್ಕೆ ತಂದರು. ಆ ಕೂಡಲೆ ಅಲ್ಲಿಂದ ರೋಗಿಗಳನ್ನು ಆಂಬುಲೆನ್ಸ್ ಮೂಲಕ ಕ್ರಮವಾಗಿ 23 ಮತ್ತು 10 ರೋಗಿಗಳನ್ನು ವಿಕ್ಟೋರಿಯಾ ಮತ್ತು ಬೌರಿಂಗ್ ಆಸ್ಪತ್ರೆಗಳಿಗೆ ಸುರಕ್ಷಿತವಾಗಿ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಇದರಿಂದ ದೊಡ್ಡ ಆಪತ್ತು ತಪ್ಪಿದಂತಾಗಿದೆ. ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಅಪಾಯ ಆಗುತ್ತಿತ್ತು ಎಂದು ಹೇಳಿದರು.
ಅಂತೆಯೇ ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್ ಅವರು, ' ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಕಾಲೇಜಿನ ಆಸ್ಪತೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕಲ್ಪಿಸಿರುವ ಚಿಕಿತ್ಸಾ ವ್ಯವಸ್ಥೆಗಳ ಪರಿಶೀಲನೆ ನಡೆಸಲಾಯಿತು. ಕಿಮ್ಸ್ ನ ಡೀನ್ ಮತ್ತು ಪ್ರಾಂಶುಪಾಲರಾದ ಡಾ.ವಿ.ಟಿ.ವೆಂಕಟೇಶ ಮತ್ತು ಇತರೆ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು. ಬೇಡಿಕೆ ಹೆಚ್ಚಿರಿವುದರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ಕಾಲೇಜುಗಳ ಆಸ್ಪತ್ರಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಲಿಕ್ವಿಡ್ ಆಕ್ಸಿಜನ್ ಸರಬರಾಜು ಮತ್ತು ಹೊಸ ಲಿಕ್ವಿಡ್ ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು' ಎಂದು ಟ್ವೀಟ್ ಮಾಡಿದ್ದಾರೆ.
Advertisement