ಬೆಂಗಳೂರು: ಕೋವಿಡ್-19 ನಿಂದ ಎದುರಾದ ಉದ್ಯೋಗ ನಷ್ಟವನ್ನು ಭರ್ತಿಗೆ ಸರ್ಕಾರಿ ಯೋಜನೆ ರೂಪಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಹೇಳಿದ್ದಾರೆ.
ರಾಜ್ಯದಲ್ಲಿ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿ ಹಾಗೂ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜು ಪಠ್ಯದಲ್ಲಿಯೇ ಕೌಶಲ್ಯ ತರಬೇತಿ ವಿಷಯವನ್ನು ಸೇರಿಸಲಾಗುತ್ತದೆ ಎಂದು ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ನಗರದ ಮಲ್ಲೇಶ್ವರದ ಒಳಾಂಗಣ ಕ್ರೀಡಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ನಾರಾಯಣ ತರಬೇತಿ ಸಂಸ್ಥೆಗಳ ಸಹಯೋಗದಲ್ಲಿ ತೆರೆಯಲಾಗಿರುವ "ಮಲ್ಲೇಶ್ವರಂ ಕೌಶಲ್ಯ ಕೇಂದ್ರ"ದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಇವತ್ತು ಕೌಶಲ್ಯವಿರುವು ದರ ಜತೆಗೆ,ಆ ಕೌಶಲ್ಯ ಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ನೌಕರಿ ಸಿಗುತ್ತದೆಯೇ ಎಂಬುದು ಬಹಳ ಮುಖ್ಯ ವಾದ ವಿಚಾರ.ಹೀಗಾಗಿ ಜಾಬ್ ಮಾರುಕಟ್ಟೆಗೆ ತಕ್ಕ ಹಾಗೆ,ಅಂದರೆ ಕೈಗಾರಿಕೆಗಳಿಗೆ ಅಗತ್ಯವಿರುವ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋ ಗಾಂಕ್ಷಿಗಳಿಗೆ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದರು.
ಇದೇ ವಿಚಾರಕ್ಕೆ ತಕ್ಕಂತೆ ಸರಣಿ ಟ್ವೀಟ್ ಮಾಡಿರುವ ಅವರು, 'ಕೋವಿಡ್-19 ಮಹಾಮಾರಿಯಿಂದಾಗಿ ಬಹಳ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ಅನೇಕ ಯುವಕ ಯುವತಿಯರು ಕೆಲಸ ಕಳೆದುಕೊಂಡಿದ್ದು, ಭವಿಷ್ಯದ ಬಗ್ಗೆ ಚಿಂತೆಗೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಮಲ್ಲೇಶ್ವರಂ ಕ್ಷೇತ್ರದ ಯುವಕ ಯುವತಿಯರಿಗೆ ಕೌಶಲ್ಯ ತರಬೇತಿ ನೀಡುವ ಸಲುವಾಗಿ “ಮಲ್ಲೇಶ್ವರಂ ಕೌಶಲ್ಯ ಕೇಂದ್ರ”ವನ್ನು ಆರಂಭಿಸಿದ್ದೇವೆ. ಕಲಿಕೆಗೆ ಅನುಕೂಲವಾಗುವಂತೆ ಸುಸಜ್ಜಿತ ತರಗತಿಗಳು ಮತ್ತು ಪ್ರಯೋಗಾಲಯಗಳನ್ನೂ ಸಹ ತಯಾರು ಮಾಡಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಎಲ್ಲ ವ್ಯವಸ್ಥೆಗಳ ಸದುಪಯೋಗ ಪಡೆದುಕೊಳ್ಳಲಿದ್ದಾರೆ. ಈ ತರಬೇತಿ ಕೇಂದ್ರದ ಬಗೆಗೆ ಮಲ್ಲೇಶ್ವರದ ಎಲ್ಲ ಕಾರ್ಯಕರ್ತ ಬಂಧುಗಳು ತಮಗೆ ಗೊತ್ತಿರುವ ಉದ್ಯೋಗ ವಂಚಿತರಿಗೆ ತಿಳಿಸಿ, ಅವರುಗಳೂ ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳುವಂತೆ ಆಸ್ಥೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
Advertisement