ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆ ತಯಾರಿಯಲ್ಲಿದ್ದ ಕುಖ್ಯಾತ ರೌಡಿಶೀಟರ್ ಕುಣಿಗಲ್ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಪಂ ಚುನಾವಣೆ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಸಲು ಕುಖ್ಯಾತ ರೌಡಿಶೀಟರ್ ಕುಣಿಗಲ್ ಗಿರಿ ಸಿದ್ಧತೆ ಮಾಡಿಕೊಂಡಿದ್ದ. ಆದರೆ, ಕಾಮಾಕ್ಷಿಪಾಳ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಲು ಪೊಲೀಸರು ಇಂದು ಗಿರೀಶ್ ನನ್ನು ವಶಕ್ಕೆ ಪಡೆದಿದ್ದಾರೆ.
ನವೆಂಬರ್ ತಿಂಗಳಲ್ಲಿ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಮಂಜುನಾಥ ಎಂಬಾತನ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಕುಣಿಗಲ್ ಗಿರಿ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಗಿರಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಸಿಸಿಬಿ ಪೊಲೀಸರು ಕುಣಿಗಲ್ ಗಿರಿಯನ್ನು ಬಂಧಿಸಿದ್ದರು. ಈತನ ವಿರುದ್ಧ ಹಪ್ತಾ ವಸೂಲಿ, ಕೊಲೆ ಯತ್ನ, ದರೋಡೆ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ.
Advertisement