ಬೆಂಗಳೂರು: ಹಸಿರೀಕರಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ವಿಷನ್ 2022 ಗೆ ಪೂರಕವಾಗಿ ಇನ್ನು ಮುಂದೆ ಬಿಡಿಎ ತನ್ನ ಸ್ವಂತ ಬಡಾವಣೆಗಳು ಮತ್ತು ಬಿಡಿಎ ಅನುಮೋದಿತ ಬಡಾವಣೆಗಳಲ್ಲಿ ಕಿರು ಅರಣ್ಯ ಬೆಳೆಸುವುದನ್ನು ಕಡ್ಡಾಯಗೊಳಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ ಹಲವು ಅಕ್ರಮ ಪ್ರಕರಣಗಳ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ಒಪ್ಪಿಸುವುದು, ಬಿಡಿಎ ಸ್ವಾಧೀನಪಡಿಸಿಕೊಂಡಿರುವ ಜಾಗದಲ್ಲಿ ಮನೆ ಕಟ್ಟಿಕೊಂಡವರಿಗೆ ಸ್ವಲ್ಪ ರಿಲೀಫ್ ನೀಡುವುದು ಸೇರಿದಂತೆ ಇನ್ನಿತರೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್ ಅವರು, ರಾಜ್ಯ ಸರ್ಕಾರ ಹಸಿರು ಪರಿಸರಕ್ಕೆ ಒತ್ತು ನೀಡಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆಯೊಂದನ್ನು ವಿಷನ್ 2022 ರಡಿ ಪ್ರಸ್ತಾಪ ಮಾಡಿದೆ. ಇದಕ್ಕೆ ಮೊದಲ ಹೆಜ್ಜೆಯಾಗಿ ಬಿಡಿಎ ಇನ್ನು ಮುಂದೆ ಅನುಮೋದನೆ ನೀಡುವ ಮತ್ತು ತನ್ನದೇ ಆದ ಬಡಾವಣೆಗಳಲ್ಲಿ ಕಿರು ಅರಣ್ಯ ಬೆಳೆಸುವುದನ್ನು ಕಡ್ಡಾಯಗೊಳಿಸಲಿದೆ ಎಂದರು.
Advertisement