ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಜೈಲಿನಲ್ಲಿರುವ ರಾಗಿಣಿ ದ್ವಿವೇದಿ ಅವರಿಗೆ ನಿನ್ನೆ ತಡರಾತ್ರಿ ಉಸಿರಾಟ, ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಜೈಲಿನ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಯ ಹಿನ್ನೆಲೆಯಲ್ಲಿ ತಡರಾತ್ರಿಯೇ ಪರಪ್ಪನ ಅಗ್ರಹಾರ ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಯಲ್ಲಿರುವ ರಾಗಿಣಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ಮಧ್ಯೆ ರಾಗಿಣಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಈ ಮೂಲಕ ಪರಪ್ಪನ ಅಗ್ರಹಾರ ಜೈಲಿನಲ್ಲೇ ರಾಗಿಣಿ ಹೊಸ ವರ್ಷ ಆಚರಿಸುವುದು ಅನೀವಾರ್ಯವಾಗಿದೆ.
ಕಳೆದ ಮೂರು ತಿಂಗಳಿನಿಂದ ರಾಗಿಣಿ ಜೈಲುವಾಸ ಅನುಭವಿಸುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್ ನಲ್ಲಿ ಜಾಮೀನು ಸಿಗದ ಕಾರಣ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅಲ್ಲಿಯೂ ಅವರಿಗೆ ನಿರಾಸೆಯಾಗಿದೆ. ಡ್ರಗ್ಸ್ ಜಾಲದ ನಂಟು ಆರೋಪದ ಮೇರೆಗೆ ಸಿಸಿಬಿ ಅಧಿಕಾರಿಗಳು ಸೆಪ್ಟೆಂಬರ್ 4 ರಂದು ಅವರ ಮನೆ ಮೇಲೆ ದಾಳಿ ನಡೆಸಿ, ವಶಕ್ಕೆ ಪಡೆದುಕೊಂಡಿದ್ದರು.
Advertisement