ಚಿತ್ರದುರ್ಗ: ಇದ್ದಕ್ಕಿದ್ದಂತೆ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಿಸಿರುವ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಚಿತ್ರದುರ್ಗ ನಗರದ ಗಾರೆಹಟ್ಟಿಯಲ್ಲಿ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಸುಟ್ಟು ಭಸ್ಮವಾಗಿದ್ದಾರೆ. ಅರುಣ್ ಕುಮಾರ್ (43), ಪತ್ನಿ ಲತಾ (35), ಮಗಳು ಅಮೃತಾ (13) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಅಕ್ಕಪಕ್ಕದವರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ.
ಘಟನೆಗೆ ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ. ಮನೆಯಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ನೆರೆಹೊರೆಯವರಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದು ಈ ದುರ್ಘಟನೆ ಸಂಭವಿಸಿದೆಯೋ ಅಥವಾ ಉದ್ದೇಶಪೂರ್ವಕವಾಗಿ ನಡೆದ ಘಟನೆಯೋ ಎಂಬುದು ತನಿಖೆ ನಂತರ ಬೆಳಕಿಗೆ ಬರಲಿದೆ.
Advertisement