ಹೈಕೋರ್ಟ್
ಹೈಕೋರ್ಟ್

ಎಚ್.ಡಿಕೆ- ಡಿ.ಸಿ.ತಮ್ಮಣ್ಣ ವಿರುದ್ಧ ಭೂ ಕಬಳಿಕೆ ಆರೋಪ: ವಿವರಣೆ ಕೇಳಿದ ಹೈಕೋರ್ಟ್

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹಾಗೂ ಡಿ.ಸಿ.ತಮ್ಮಣ್ಣ ಅವರ ಸಂಬಂಧಿ ಸಾವಿತ್ರಮ್ಮ ವಿರುದ್ಧ ಕೇತಗಾನಹಳ್ಳಿ ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
Published on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹಾಗೂ ಡಿ.ಸಿ.ತಮ್ಮಣ್ಣ ಅವರ ಸಂಬಂಧಿ ಸಾವಿತ್ರಮ್ಮ ವಿರುದ್ಧ ಕೇತಗಾನಹಳ್ಳಿ ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಈ ಕುರಿತಂತೆ ಸಮಾಜ ಪರಿವರ್ತನಾ ಸಮಯದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್‌. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಪ್ರಕರಣದ ಬಗ್ಗೆ 2014ರಲ್ಲಿ ಲೋಕಾಯುಕ್ತರು ಹೊರಡಿಸಿದ್ದ ಆದೇಶದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದೆ.

ಅರ್ಜಿದಾರರ ಪರ ವಕೀಲರು, ‘ಕರ್ನಾಟಕ ಲೋಕಾಯುಕ್ತ 2014ರ ಆ.5ರಂದು ಹದಿನೈದು ದಿನಗಳಲ್ಲಿ ಭೂ ಒತ್ತುವರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದರೂ ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿಕೊಂಡಿರುವ 54 ಎಕರೆ ತೆರವುಗೊಳಿಸಲು ಏನೂ ಕ್ರಮ ಕೈಗೊಂಡಿಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಅಲ್ಲದೆ ‘ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಆಸ್ತಿ ಮಾರುಕಟ್ಟೆ ಮೌಲ್ಯ ಪ್ರತಿ ಎಕರೆಗೆ ಸುಮಾರು 75 ಲಕ್ಷದಿಂದ 1 ಕೋಟಿ ರೂ. ಇದೆ. ಆ ಭೂಮಿಗಳನ್ನು ಕುಮಾರಸ್ವಾಮಿ ಮತ್ತಿತರರು ಪ್ರತಿ ಎಕರೆಗೆ ಆಗ ಮಾರುಕಟ್ಟೆ ಮೌಲ್ಯ 25ರಿಂದ 30 ಸಾವಿರ ಇದ್ದರೂ ಕೇವಲ ಎಕರೆಗೆ 5 ಸಾವಿರ ರೂ.ಗಳಂತೆ ಕರ್ನಾಟಕ ಭೂ ಕಂದಾಯ ಕಾಯಿದೆಯನ್ನು ಉಲ್ಲಂಘಿಸಿ ಖರೀದಿಸಲಾಗಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗಿದೆ. ಹಾಗಾಗಿ ಲೋಕಾಯುಕ್ತರ ಆದೇಶದ ಮೇಲೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com