ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರೊಬ್ಬರು ಹೇಳಿಕೊಡುವ ಪಕ್ಕೆಲುಬು ಎಂಬ ಪದವನ್ನು ಉಚ್ಚರಿಸಲು ಕಷ್ಟಪಡುವ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಶಾಲೆ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಕಳೆದೆರಡು ದಿನಗಳಿಂದ ಪ್ರಾಥಮಿಕ ಶಾಲೆಯೊಂದರ ವಿದ್ಯಾರ್ಥಿ ಪಕ್ಕೆಲುಬು ಎಂಬ ಪದವನ್ನು ಉಚ್ಚರಿಸಲು ಕಷ್ಟಪಡುತ್ತಿರುವ ವಿದ್ಯಾರ್ಥಿಯ ವಿಡಿಯೋ ಹಾಸ್ಯಾಸ್ಪದವಾಗಿ ಸಾಕಷ್ಟು ವೈರಲ್ ಆಗಿದೆ.
ಇದರಿಂದ ಎಚ್ಚೆತ್ತುಕೊಂಡಿರುವ ಸಚಿವರು ಗುರುವಾರ ಆದೇಶ ಹೊರಡಿಸಿದ್ದು, ಯಾವ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂಬುದನ್ನು ತಿಳಿಯುವುದಕ್ಕಾಗಿ ಸೈಬರ್ ಕ್ರೈಂ ಠಾಣೆ ದೂರು ನೀಡಲಾಗುತ್ತಿದೆ. ವರದಿ ಬಂದ ಬಳಿಕ ಸಂಬಂಧಪಟ್ಟ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಕ್ಕಳು ತಪ್ಪು ಉಚ್ಚಾರ ಮಾಡುವುದು ಸಹಜ. ಶಿಕ್ಷಕರಾದವರು ಮಕ್ಕಳಿಗೆ ಸರಿಯಾದ ಉಚ್ಚಾರ ಮಾಡಿಸಬೇಕೇ ವಿನಃ ಅದನ್ನೇ ದೊಡ್ಡ ಅಪರಾಧವೆಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಕೂಡ ಅಪರಾಧವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
Advertisement