ಬೆಂಗಳೂರು: ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ನೇತೃತ್ವದಲ್ಲಿ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ರಚನೆಗೆ ನಿರ್ಧರಿಸಲಾಗಿದೆ.
ಐದು ಮಂದಿ ಸದಸ್ಯರ ಸಮಿತಿ ಇದಾಗಿದ್ದು, ಆರಗ ಜ್ಞಾನೇಂದ್ರ, ಎಸ್ಆರ್ ವಿಶ್ವನಾಥ್, ಎಟಿ ರಾಮಸ್ವಾಮಿ, ರಾಜಶೇಖರ ಬಸವರಾಜ ಪಾಟೀಲ್, ರಾಜೂಗೌಡ ಸಮಿತಿಯಲ್ಲಿ ಇರಲಿದ್ದಾರೆ.
ಅಕ್ರಮ ಗಣಿಗಾರಿಕೆ ಕುರಿತು ತನಿಖೆಗೆ ನೇಮಕವಾಗಿರುವ ಎಸ್ಐಟಿ ಅವಧಿಯನ್ನು ಒಂದು ವರ್ಷಗಳ ಕಾಲ ವಿಸ್ತರಣೆಗೂ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
“ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇವಿಎಂಗಳನ್ನು ಸಂಗ್ರಹಿಸಿಡಲು ಗೋದಾಮುಗಳ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇವಿಎಂ ಸಂರಕ್ಷಣೆ ಮಾಡಲಾಗುತ್ತದೆ. ಇವಿಎಂ ಗೋದಾಮುಗಳ ನಿರ್ವಹಣೆಗೆ 120 ಕೋಟಿ ರೂಪಾಯಿ ವೆಚ್ಚವಾಗಲಿದೆ,” ಎಂದು ಮಾಧುಸ್ವಾಮಿ ಮಾಹಿತಿ ನೀಡಿದರು. ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯನ್ನು ಸುಮಾರು 132 ಕೋಟಿ ರು ವೆಚ್ಚದಲ್ಲಿ ಮೇಲ್ದರ್ಜೇರಿಸಲಾಗುವುದು ಂದು ಹೇಳಿದ್ದಾರೆ.
ಯಾದಗಿರಿ ಹಾಗೂ ಹಾವೇರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದ್ದು, ಇದರಲ್ಲಿ ಕೇಂದ್ರ ಸರಕಾರದ ಪಾಲು ಶೇ.60 ಹಾಗೂ ರಾಜ್ಯ ಸರಕಾರದ ಪಾಲು ಶೇ.40ರಷ್ಟು ಇರಲಿದೆ. ಮೈಸೂರಿನ ಬಿಕೆಟಿಬಿ ಆಸ್ಪತ್ರೆ ಆವರಣದಲ್ಲಿ 42 ಕೋಟಿ ರೂ.ವೆಚ್ಚದಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಪಾಂಡವಪುರ ಹಾಗೂ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಗಳನ್ನು 40 ವರ್ಷಕ್ಕೆ ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಲು ನಿರ್ಧರಿಸಲಾಗಿದ್ದು, ಈ ಸಂಬಂಧ ಶೀಘ್ರವೇ ಟೆಂಡರ್ ಕರೆಯಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಅಲ್ಲದೇ, ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ 32 ಕೋಟಿ ರೂ.ವೆಚ್ಚದಲ್ಲಿ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.
Advertisement