ಫ್ರೀ ಕಾಶ್ಮೀರ ಫಲಕ ಪ್ರದರ್ಶನ: ನಳಿನಿ ಬಾಲಯ್ಯಗೆ ಷರತ್ತುಬದ್ಧ ಜಾಮೀನು
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ. 8 ರಂದು ನಡೆದಿದ್ದ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದ ಯುವತಿ ಬಿ. ನಳಿನಿ ಹಾಗೂ ಈ ಪ್ರತಿಭಟನೆಯನ್ನು ಆಯೋಜಿಸಿದ್ದ ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಎಸ್. ಮರಿದೇವಯ್ಯ ಅವರಿಗೆ ಇಲ್ಲಿನ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಸೋಮವಾರ ಆದೇಶ ಹೊರಡಿಸಿದೆ.
ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಆರ್. ಮೆಂಡೋನ್ಸ ಅವರು ಆರೋಪಿಗಳ ಪರ ವಕೀಲರು ಹಾಗೂ ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಈ ಆದೇಶ ನೀಡಿದ್ದಾರೆ.
ಆರೋಪಿಗಳಾದ ನಳಿನಿ ಹಾಗೂ ಮರಿದೇವಯ್ಯ ಅವರಿಗೆ ತಲಾ 50 ಸಾವಿರ ರೂಪಾಯಿ ಬಾಂಡ್, ಒಬ್ಬರು ಶೂರಿಟಿ, ಪಾಸ್ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ತನಿಖಾಧಿಕಾರಿಗಳಿಗೆ ಸಹಕರಿಸಬೇಕು, 15 ದಿನಗಳಿಗೆ ಒಮ್ಮೆ ಪೊಲೀಸ್ ಠಾಣೆಗೆ ಹಾಜರಾಗಬೇಕು. ಸಾಕ್ಷ್ಯಗಳನ್ನು ನಾಶಪಡಿಸಬಾರದು, ಇದೇ ರೀತಿಯ ಅಪರಾಧಗಳನ್ನು ಮತ್ತೆ ಎಸಗಬಾರದು ಮತ್ತಿತರ ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈಗಾಗಲೇ ಜಯಲಕ್ಷ್ಮೀಪುರಂ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ಧ ದೇಶದ್ರೋಹದ ಆರೋಪದಡಿ ಮೊಕದ್ದಮೆ ಹೂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ