ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ತೀವ್ರ ವಿರೋಧ: ಸರ್ಕಾರದ ಸಮರ್ಥನೆ

ಈ ದೇಶದಲ್ಲಿ ಎಲ್ಲರಿಗೂ ಫಸಲು ಬೆಳೆಯುವ ಹಕ್ಕಿದೆ. ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದಾಗಿ ಯುವಕರು ಕೃಷಿಯತ್ತ ಹೆಚ್ಚು ಆಕರ್ಷಿತರಾಗಲಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.
ಬಿಸಿ ಪಾಟೀಲ್
ಬಿಸಿ ಪಾಟೀಲ್

ಬೆಂಗಳೂರು: ಈ ದೇಶದಲ್ಲಿ ಎಲ್ಲರಿಗೂ ಫಸಲು ಬೆಳೆಯುವ ಹಕ್ಕಿದೆ. ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದಾಗಿ ಯುವಕರು ಕೃಷಿಯತ್ತ ಹೆಚ್ಚು ಆಕರ್ಷಿತರಾಗಲಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಮುಂಗಾರು ಹಂಗಾಮಿನ ಕಾರ್ಯಾಗಾರ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ‘ಕೃಷಿ ವಿಶ್ವವಿದ್ಯಾಲಯಗಳಿಂದ ನಾಲ್ಕು ಲಕ್ಷ ಪದವೀಧರರು ಪ್ರತಿ ವರ್ಷ ಹೊರಬರುತ್ತಿದ್ದಾರೆ. ಎಲ್ಲರಿಗೂ ಉದ್ಯೋಗ ಕಷ್ಟ. ಕೃಷಿ ಆಧಾರಿತ ಕೈಗಾರಿಕೆಗಳ ಜತೆಗೆ ಸಂಸ್ಕರಣಾ ಘಟಕ, ಶೀಥಲೀಕರಣ ಘಟಕ, ಆಹಾರ ಉತ್ಪಾದನಾ ಘಟಕಗಳ ಸ್ಥಾಪನೆಗೂ ಇನ್ನು ಮುಂದೆ ಕೃಷಿ ಭೂಮಿ ಬಳಕೆಯಾಗುವುದು ಇನ್ನು ಸಾಧ್ಯವಿದೆ’ ಕೃಷಿಗೆ ತೊಡಗಿಸಿಕೊಳ್ಳುವವರಿಗೆ ಈ ಹಿಂದಿನ ಕಾನೂನು ಅನಾನುಕೂಲ ಆಗಿತ್ತು. ಈಗ ಕಾಯ್ದೆ ತಿದ್ದುಪಡಿಗೆ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇದರಿಂದ ಕೃಷಿ ಮಾಡೋಕೆ ಭೂಮಿ ಖರೀದಿ ಮಾಡಬಹುದು ಎಂದು ಸಮರ್ಥಿಸಿಕೊಂಡರು.

ಕೃಷಿಗೆ ಮಾತ್ರ ಬಳಕೆ ಆಗಬೇಕು ಎಂಬ ಬಗ್ಗೆ ಕಂದಾಯ ಇಲಾಖೆ ಕೆಲವು ನಿಬಂಧನೆಗಳನ್ನ ಹಾಕುತ್ತದೆ. ನಾನು ಕ್ಯಾಬಿನೆಟ್ ನಲ್ಲಿ ಅದರ ಬಗ್ಗೆ ವಿರೋಧ ಮಾಡಿಲ್ಲ. ಕೃಷಿ ಅಲ್ಲದೇ ಇದ್ದರೂ ಆಗ್ರೋ ಇಂಡಸ್ಟ್ರೀಸ್ ಮಾಡಬಹುದು. ಇದರಿಂದ ರಿಯಲ್ ಎಸ್ಟೇಟ್ ಲಾಬಿ ಆಗುತ್ತದೆ ಎಂದು ನನಗೆ ಅನಿಸುತ್ತಿಲ್ಲ. ಕೃಷಿ ಚಟುವಟಿಕೆ ಹೆಸರಲ್ಲಿ ರಿಯಲ್ ಎಸ್ಟೇಟ್ ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

‘ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರ್ಕಾರ ಉಳ್ಳವರು ಭೂಮಿ ಒಡೆಯರು ಎಂಬ ಕಾನೂನು ಜಾರಿಗೆ ತರಲು ಮುಂದಾಗಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಸಚಿವ ಸಂಪುಟದ ನಿರ್ಧಾರದ ಕುರಿತಂತೆ  ಪಕ್ಷದ ಹಿರಿಯ ನಾಯಕರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಂದಿರಾ ಗಾಂಧಿ ಮತ್ತು ದೇವರಾಜ ಅರಸು ಅವರ ಸರ್ಕಾರ ಉಳುವವರನ್ನೇ
ಭೂಮಿ ಒಡೆಯರನ್ನಾಗಿ ಮಾಡಿತ್ತು. ಆದರೆ ಈಗಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದ್ದೇಶ ಕಾರ್ಪೊರೇಟ್ ಕಂಪನಿಗಳಿಗೆ, ಶ್ರೀಮಂತರಿಗೆ, ಬಂಡವಾಳಶಾಹಿಗಳಿಗೆ ಕೃಷಿ ಭೂಮಿ ಧಾರೆ ಎರೆಯುವುದಾಗಿದೆ’ ಎಂದು ಆರೋಪಿಸಿದರು. 

ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿದರೆ ಭೂ ಮಾಫಿಯಾ ಆರಂಭವಾಗುತ್ತದೆ. ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವಾಗುತ್ತದೆ. ಶ್ರೀಮಂತರು ಭೂಮಿ ಖರೀದಿ ಮಾಡಿ ಭೂ ಬ್ಯಾಂಕ್ ಮಾಡಿಕೊಳ್ಳುತ್ತಾರೆ. ಇದರಿಂದ ಸಣ್ಣ ಹಿಡುವಳಿದಾರರಿಗೆ ತೊಂದರೆಯಾಗಿ ಭೂಮಿ ಕಳೆದುಕೊಂಡು ಅವರು ಕೃಷಿ ಕೂಲಿ ಕಾರ್ಮಿಕರಾಗುತ್ತಾರೆ. ಹೀಗಾಗಿ ಸಂಪುಟದ ನಿರ್ಣಯವನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com