ಮತ್ತೆ ಲಾಕ್ ಡೌನ್ ಇಲ್ಲ; ಗುರುವಾರ ಮಾಸ್ಕ್ ಡೇ ಆಚರಣೆ: ಯಡಿಯೂರಪ್ಪ

ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಮಹತ್ವದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಅಷ್ಟೇ ಅಲ್ಲದೇ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ, ಆದರೆ ಜನರಲ್ಲಿ ಮಾಸ್ಕ್ ಧರಿಸುವ ಕುರಿತು ಮತ್ತಷ್ಟು ಜನಜಾಗೃತಿ ಮೂಡಿಸಲಾಗುವುದು. ಇದೇ ಉದ್ದೇಶದಿಂದ ಗುರುವಾರ ಮಾಸ್ಕ್ ಡೆ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಚಿತ್ರ ನಟರು, ಗಣ್ಯರು, ಮಾಸ್ಕ್ ಧರಿಸುವ ಮತ್ತು ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವ ಕುರಿತು ಜನಜಾಗೃತಿ ಮೂಡಿಸಬೇಕು, ಮಾಸ್ಕ್ ಧರಿಸದಿದ್ದರೆ ೨೦೦ ರೂಪಾಯಿ ದಂಡ ವಿಧಿಸಲಾಗುವುದು. ಈ ಸಂಬಂಧ ಕಟ್ಟುನಿಟ್ಟಿನ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು. 

ಮಹಾರಾಷ್ಟ್ರದಿಂದ ಆಗಮಿಸುವವರಿಗೆ ೭ ದಿನ, ಚೆನ್ನೈ, ದೆಹಲಿಯಿಂದ ಬರುವವರಿಗೆ ಮೂರು ದಿನಗಳ ಕಾಲ ಕ್ವಾರಂಟೀನ್ ಮಾಡಲಾಗುವುದು. ಹೊರ ರಾಜ್ಯಗಳಿಂದ ಆಗಮಿಸುವವರಿಂದ ಸೋಂಕು ಹರಡುವುದನ್ನು ತಡೆಗಟ್ಟಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ.ಬೆಂಗಳೂರಿನಲ್ಲಿ ಒಟ್ಟು 697 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 330 ಸಕ್ರಿಯ ಪ್ರಕರಣಗಳಿದ್ದು, 6 ಜನ ಐಸಿಯು ನಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು ಎಂದರು. 

ಇದೇ ಗುರುವಾರ ಮಾಸ್ಕ್ ಡೇ ಆಚರಿಸಲಾಗುವುದು. ವಿಧಾನಸೌಧದಿಂದ ಬೆಳಿಗ್ಗೆ 8.30 ಗಂಟೆಗೆ ಮಾಸ್ಕ್ ಧರಿಸಿ 1 ಕಿ.ಮೀ. ವಾಕ್ ಮಾಡುವ ಮೂಲಕ ಮಾಸ್ಕ್ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಈ ಕಾರ್ಯಕ್ರಮ ರಾಜ್ಯಾದ್ಯಂತ ಪಂಚಾಯತ್ ಮಟ್ಟದಲ್ಲಿಯೂ ಆಚರಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯದ 8000 ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಗಮನಹರಿಸಲಾಗುವುದು. ಸೋಂಕು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ, ಹೋಂ ಕ್ವಾರಂಟೈನ್ ಪಾಲನೆಯನ್ನು ಖಾತರಿ ಪಡಿಸಲಾಗುವುದು ಎಂದರು.

ರಾಜ್ಯದಲ್ಲಿ ಒಟ್ಟು 2956 ಸಕ್ರಿಯ ಪ್ರಕರಣಗಳು ಇದ್ದು, 93 ಶೇಕಡಾ ಜನರಿಗೆ ರೋಗ ಲಕ್ಷಣ ಇಲ್ಲ. 200 ಜನರಿಗೆ ಮಾತ್ರ ರೋಗ ಲಕ್ಷಣ ಇದೆ. ಹೀಗಾಗಿ ಪರೀಕ್ಷಾ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ 10 ಲಕ್ಷ ಜನಸಂಖ್ಯೆಗೆ 7100 ಪರೀಕ್ಷೆ ನಡೆಸಲಾಗಿದೆ. ಐಸಿಎಂಆರ್ ಮಾರ್ಗಸೂಚಿಗಳಿಗಿಂತ ಹೆಚ್ಚು ಪರೀಕ್ಷೆ ನಡೆಸುತ್ತಿರುವುದು ರಾಜ್ಯದ ಹೆಗ್ಗಳಿಕೆಯಾಗಿದೆ ಎಂದು ಹೇಳಿದರು. 

ಚಿಕಿತ್ಸೆಯ ವಿಧಿ ವಿಧಾನ ಹಾಗೂ ಚಿಕಿತ್ಸೆ ದರ ನಿಗದಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಕುರಿತು ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುವುದು. ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನತೆ ಆತಂಕ ಪಡಬೇಕಾಗಿಲ್ಲ. ಆದರೆ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಮತ್ತು ವೈಯಕ್ತಿಕ ಸ್ವಚ್ಛತೆಯಂತಹ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದೆ ತೆಗೆದುಕೊಳ್ಳಬೇಕು ಎಂದು ಯಡಿಯೂರಪ್ಪ ಸಲಹೆಮಾಡಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com