ಬೆಂಗಳೂರು: ವಿವಾದಿತ ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿದ್ದರೆ ಕಂದಾಯ ಸಚಿವ ಆರ್. ಅಶೋಕ್ ಸರ್ಕಾರದ ನಡೆಯನ್ನು ಸಮರ್ಥಿಸಿ ಕೊಂಡಿದ್ದಾರೆ. 10 ದಿನಗಳಲ್ಲಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ತಿದ್ದುಪಡಿ ತಂದು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಸಣ್ಣ ಕೈಗಾರಿಕೆಗಳು ಹಾಗೂ ಕೃಷಿ ವಲಯಕ್ಕೆ ಆಗಲಿರುವ ಅನುಕೂಲಗಳ ಕುರಿತು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.
‘ಈ ಹಿಂದೆ ಕೈಗಾರಿಕೆ ಸ್ಥಾಪನೆಗೆ ಅರ್ಜಿ ಸಲ್ಲಿಸಿದರೆ, ಐದರಿಂದ ಹತ್ತು ವರ್ಷ ಕಾಯಬೇಕಿತ್ತು. ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಇದರಿಂದಾಗಿ 30 ದಿನಗಳೊಳಗೆ ಭೂಪರಿವರ್ತನೆ ಪೂರ್ಣಗೊಳ್ಳಲಿದ್ದು, ಈ ವಿಧಾನವನ್ನು ಇನ್ನಷ್ಟು ಸರಳಗೊಳಿಸುವ ಕುರಿತು ಅಧ್ಯಯನ ಕೈಗೊಂಡಿದ್ದೇನೆ’ ಎಂದರು.
‘ರಾಜ್ಯದಲ್ಲಿ ಅಂದಾಜು ಶೇ 80ರಷ್ಟು ಸಣ್ಣ ಕೈಗಾರಿಕೆಗಳು ಬಾಡಿಗೆ ಜಾಗದಲ್ಲಿವೆ. ಈ ಕಾಯ್ದೆ ತಿದ್ದುಪಡಿಯಿಂದ ಸ್ವಂತ ಜಾಗದಲ್ಲಿ ಕೈಗಾರಿಕೆಗಳನ್ನು ಆರಂಭಿಸಬಹುದು. ರಾಜ್ಯದಲ್ಲಿ ಲಕ್ಷಾಂತರ ಎಕರೆಗಳಷ್ಟು ಭೂಮಿಯಲ್ಲಿ ಉಳುಮೆ ಮಾಡುತ್ತಿಲ್ಲ. ಕಚ್ಛಾ ವಸ್ತುಗಳು, ಮಾನವ ಸಂಪನ್ಮೂಲ ಇರುವ ಜಾಗದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ, ಸುಮಾರು 90 ಲಕ್ಷ ಉದ್ಯೋಗ ಸೃಷ್ಟಿಯಾಗುತ್ತದೆ. ಕೃಷಿ ಸಂಪತ್ತು ಹೆಚ್ಚುವ ಜೊತೆಗೆ ಗ್ರಾಮೀಣ ಅಭಿವೃದ್ಧಿಯೂ ಆಗಲಿದೆ’ ಎಂದರು. ಗುಜರಾತ್ ಕೃಷಿ ಉತ್ಪಾದನೆ ಉದಾಹರಣೆ ನೀಡಿದ ಅಶೋಕ್, ಕರ್ನಾಟಕಕ್ಕಿಂತ ಅಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಉತ್ಪಾದನೆ ನಡೆಯಲಿದೆ ಎಂದು ಹೇಳಿದ್ದಾರೆ.
ಪ್ರತಿ ವರ್ಷ ಕೃಷಿವಿವಿ ಯಿಂದ ಹಲವು ಮಂದಿ ಪದವಿ ಪಡೆದು ಬರುತ್ತಿದ್ದಾರೆ. ಅವರಲ್ಲಿ ಕೇವಲ ಶೇ. 5 ರಷ್ಟು ಮಂದಿಗೆ ಮಾತ್ರ ಉದ್ಯೋಗ ನೀಡುತ್ತಿದ್ದೇವೆ,ಉಳಿದ 95 ಮಂದಿ ಏನು ಮಾಡಬೇಕು, ಅವರಿಗೆ ಕೃಷಿ ಬಗ್ಗೆ ಸಂಪೂರ್ಣ ಜ್ಞಾನ ಇರುತ್ತದೆ ಆದರೆ ಅವರಿಗೆ ಭೂಮಿ ಖರೀದಿಸಲು ಸಾಧ್ಯವಾಗದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.
Advertisement