
ಬೆಂಗಳೂರು: ದೇಶದಲ್ಲೇ ಕೊರೋನಾಗೆ ಮೊದಲ ಬಲಿ ನಮ್ಮ ರಾಜ್ಯದಲ್ಲಿ ಆಗಿರುವುದಕ್ಕೆ ತಲೆ ತಗ್ಗಿಸುವಂತಾಗಿದೆ. ಕಲಬುರಗಿ ಪ್ರಕರಣ ಸೇರಿದಂತೆ ರಾಜ್ಯದಾದ್ಯಂತ ಸೋಂಕು ಹರಡದಂತೆ ಎಲ್ಲಾ ರೀತಿಯ ಕ್ರಮವನ್ನೂ ಕೈಗೊಳ್ಳುತ್ತೇವೆ. ಎಲ್ಲಾ ಜಿಲ್ಲೆಗಳಲ್ಲೂ ಪ್ರಯೋಗಾಲಯ ಮಾಡುತ್ತೇವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.
ಕೊರೋನಾ ಬಗೆಗಿನ ಆರೋಗ್ಯ ಸಚಿವ ಶ್ರೀರಾಮುಲು ಉತ್ತರಕ್ಕೆ ಪೂರಕವಾಗಿ ಮಾತನಾಡಿದ ಅವರು, ಸೋಂಕು ಹರಡುವುದನ್ನು ತಡೆಗಟ್ಟಲು ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೆ ಬೀಳುವುದಿಲ್ಲ. ದುಬಾರಿ ಬೆಲೆಗೆ ಮಾಸ್ಕ್ ಮತ್ತಿತರ ವೈದ್ಯಕೀಯ ವಸ್ತುಗಳನ್ನು ಮಾರಾಟ ಮಾಡುವ ಔಷಧಿ ಅಂಗಡಿಗಳ ಲೈಸೆನ್ಸ್ ರದ್ದು ಮಾಡಲಾಗುವುದು. ಆರೋಗ್ಯ ಸಚಿವರು ತಜ್ಞ ವೈದ್ಯರೊಂದಿಗೆ ಕಲಬುರಗಿಗೆ ಭೇಟಿ ನೀಡಿ ಅಗತ್ಯ ಕ್ರಮಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಶ್ರೀರಾಮುಲು ಅವರು, ಕಲಬುರಗಿಯಲ್ಲಿ ಸೋಂಕು ಹರಡದಂತೆ ತಡೆಯಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗಳ್ಳಲಾಗಿದೆ. ಸೋಂಕು ಪೀಡಿತ ವ್ಯಕ್ತಿ ಹಲವು ಆಸ್ಪತ್ರೆಗಳಿಗೆ ಭೇಟಿ ನೀಡಿದ ಮಾಹಿತಿ ತಿಳಿದಿರಲಿಲ್ಲ. ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆಯೇ ವ್ಯಕ್ತಿಯ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ. ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಕುಟುಂಬ ಸದಸ್ಯರ ಜೊತೆಗೆ ಇತರೆ 25 ಮಂದಿಯನ್ನು ವಿಶೇಷ ಕೊಠಡಿಯಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement