ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಶ್ರೀಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ಈ ವರ್ಷದ ಯುಗಾದಿ ಹಬ್ಬ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಯಲಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳ ಭಕ್ತ ಸಮೂಹ ದೇವಾಲಯದ ಆಡಳಿತದೊಂದಿಗೆ ಸಹಕರಿಸಬೇಕೆಂದು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಯುಗಾದಿ ಜಾತ್ರೆ ನಡೆಯುತ್ತದೆ. ಆದರೆ ದೇಶಾದ್ಯಂತ ಹರಡುತ್ತಿರುವ ಕರೋನಾ ಸೋಂಕಿನ ಹಿನ್ನೆಲೆಯಲ್ಲಿ ಅತ್ಯಂತ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ. ಯುಗಾದಿ ಜಾತ್ರೆಗೆ ನಾಡಿನ ಹಾಗೂ ಹೊರ ರಾಜ್ಯಗಳ ಭಕ್ತರು ಸಾಲುಸಾಲಾಗಿ ನಡೆದು ಪಾದಯಾತ್ರೆ ಮೂಲಕ ಬರುವುದು ವಾಡಿಕೆ. ಆದರೆ ಅವರೆಲ್ಲ ರಾತ್ರಿ ವೇಳೆ ರಸ್ತೆ ಬದಿ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ. ಹಾಗೆಯೇ ದೇವಾಲಯದ ಸುತ್ತಮುತ್ತ ಮಲಗಿ ವಿಶ್ರಾಂತಿ ಪಡೆಯುತ್ತಾರೆ. ಆದರೆ ಈ ಬಾರಿ ರಸ್ತೆ ಬದಿ ಇಲ್ಲವೇ ದೇವಾಲಯದ ಸುತ್ತಮುತ್ತ ಮತ್ತು ಶ್ರೀಕ್ಷೇತ್ರದಲ್ಲಿ ಎಲ್ಲೆಂದರಲ್ಲಿ ಮಲಗಲು ಅವಕಾಶ ನಿರಾಕರಿಸಲಾಗಿದೆ. ಹಾಗೆಯೇ ದೇವಾಲಯದ ವಸತಿಗೃಹಗಳಲ್ಲೂ ಭಕ್ತರ ವಸತಿಗೆ ಅವಕಾಶ ನಿಷೇಧಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈಗಾಗಲೇ ಜಾತ್ರೆ, ಪರಿಷೆ, ಉತ್ಸವ ಹಾಗೂ ಹೆಚ್ಚು ಜನ ಸೇರುವ ಮದುವೆಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಮಲೆ ಮಹದೇಶ್ವರ ಬೆಟ್ಟದ ಯುಗಾದಿ ಜಾತ್ರೆ ನೂರಾರು ವರ್ಷಗಳಿಂದಲೂ ನಡೆಯುತ್ತಿರುವುದರಿಂದ ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ಹಾಗಾಗಿ ಸಾಂಪ್ರಾದಾಯಿಕವಾಗಿ ಆಚರಿಸಲಾಗುತ್ತಿರುವುದರಿಂದ ಶ್ರೀಕ್ಷೇತ್ರದಲ್ಲಿ ಆರೋಗ್ಯಕರ ಪರಿಸರ ನಿರ್ಮಾಣ ಮತ್ತು ಯಾವುದೇ ಸೋಂಕು ಹರಡುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಭಕ್ತರ ಹಿತದೃಷ್ಟಿಯಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Advertisement