ಬೆಂಗಳೂರು: ದೇಶದಲ್ಲಿ ಕೊರೋನಾ ವೈರಾಣು ಸೋಂಕಿತರ ಸಂಖ್ಯೆ 600 ನ್ನು ಸಮೀಪಿಸುತ್ತಿದೆ. ಮಹಾರಾಷ್ಟ್ರ, ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಇತ್ತ ಕರ್ನಾಟಕದಲ್ಲಿ ಕೊರೋನಾದಿಂದ ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಿರುವ 2 ನೇ ಪ್ರಕರಣ ಇದಾಗಿದೆ. ಇದಕ್ಕೂ ಮುನ್ನ ಕಲಬುರ್ಗಿಯ 74 ವರ್ಷದ ವೃದ್ಧ ಸಾವನ್ನಪ್ಪಿದ್ದರು.
ಮೆಕ್ಕಾದಿಂದ ವಾಪಸ್ಸಾಗಿದ್ದ ಗೌರಿಬಿದನೂರಿನ ವೃದ್ಧೆಗೆ ಕೊರೋನಾ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿತ್ತು. ವೃದ್ಧೆಯ ವೈದ್ಯಕೀಯ ಪರೀಕ್ಷೆ ವರದಿ ಇನ್ನಷ್ಟೇ ಬರಬೇಕಿದೆ. ಈ ಬಳಿಕವಷ್ಟೇ ಸ್ಪಷ್ಟತೆ ಸಿಗಲಿದೆ.
ಆಕೆಯ ಸಾವಿನ ಕುರಿತ ಸಂಪೂರ್ಣ ವರದಿ ಕೈಸೇರುವ ತನಕ ಇದು ಕೊರೋನಾ ಸೋಂಕಿನಿಂದಲೇ ಉಂಟಾದ ಮರಣ ಎಂದು ದೃಢಪಡಿಸಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಪಾಟೀಲ್ ಓಂಪ್ರಕಾಶ್ ತಿಳಿಸಿದ್ದಾರೆ.
ಆಂಧ್ರಪ್ರದೇಶ ಮೂಲದ 75 ವರ್ಷದ ಮಹಿಳೆ ಮಾರ್ಚ್ 23ರಂದು ಮೆಕ್ಕಾದಿಂದ ವಾಪಸ್ಸಾಗಿ ಗೌರಿಬಿದನೂರಿನಲ್ಲಿರುವ ಮಗನ ಮನೆಯಲ್ಲಿ ಸ್ವಯಂ ನಿರ್ಬಂಧ ವಿಧಿಸಿಕೊಂಡು ಇದ್ದರು. ಮಾ.24 ರಂದು ಉಸಿರಾಟದ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
Advertisement