ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೊಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನ ಮಾಡುತ್ತಿದ್ದು ರೋಗ ಪತ್ತೆಗಾಗಿ ಬಳಸಲಾಗುವ ಆರ್.ಟಿ ಪಿಸಿಆರ್ (RT-PCR) ಉಪಕರಣಗಳನ್ನು ಆರೋಗ್ಯ ಇಲಾಖೆಗೆ ಒದಗಿಸಲಾಗುತ್ತಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಶುಸಂಗೋಪನೆ ಇಲಾಖೆ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯಗಳ ಲ್ಯಾಬ್ ಗಳಲ್ಲಿ ಈ ಉಪಕರಣಗಳು ಲಭ್ಯವಿದ್ದು,ಇವುಗಳನ್ನು ಸಂಕಷ್ಟದ ಪರಿಸ್ಥಿತಿಯಲ್ಲಿ ಬಳಸಿಕೊಳ್ಳಲು ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿತ್ತು.
ಸದ್ಯ ಈ ಉಪಕರಣಗಳನ್ನು ಕೊವಿಡ್-೧೯ ಪತ್ತೆಗೆ ಬಳಸಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ಸೋಂಕು ಪತ್ತೆಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ತಿಳಿಸಿದ್ದಾರೆ.
ರೋಗ ಪತ್ತೆ ಹಚ್ಚುವಲ್ಲಿ ಲ್ಯಾಬ್ ಗಳ ಪಾತ್ರ ಪ್ರಮುಖವಾಗಿದ್ದು, ಹೆಬ್ಬಾಳ ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿದ್ದ ೨ ಆರ್.ಟಿ ಪಿಸಿಆರ್ ಉಪಕರಣಗಳು ಆರೋಗ್ಯ ಇಲಾಖೆಯ ಲ್ಯಾಬ್ ಗಳಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಭು ಚವ್ಹಾಣ್ ಹೇಳಿದ್ದಾರೆ.
Advertisement