ಎಲ್'ಕೆಜಿ, ಯುಕೆಜಿ ಮಕ್ಕಳಿಗೂ ಆನ್'ಲೈನ್ ಕೋಚಿಂಗ್ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬಹುದು, ಎಷ್ಟು ಶೈಕ್ಷಣಿಕ ದಿನಗಳು ಕಡಿಮೆ ಆಗುತ್ತದೆ ಎಂಬ ಬಗ್ಗೆ ಶಿಕ್ಷಣ ಇಲಾಖೆ ಅಧ್ಯಯನ ಮಾಡುತ್ತಿದೆ. ತರಗತಿಗಳನ್ನು ಪಾಳಿಯ ಆಧಾರದಲ್ಲಿ ನಡೆಸಬೇಕಾ ಅಥವಾ ಪರ್ಯಾಯ ವ್ಯವಸ್ಥೆ ‌ಮಾಡಬೇಕಾ ಎಂಬ ಚರ್ಚೆಯೂ ನಡೆಯುತ್ತಿದೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್
Updated on

ಬೆಂಗಳೂರು: ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬಹುದು, ಎಷ್ಟು ಶೈಕ್ಷಣಿಕ ದಿನಗಳು ಕಡಿಮೆ ಆಗುತ್ತದೆ ಎಂಬ ಬಗ್ಗೆ ಶಿಕ್ಷಣ ಇಲಾಖೆ ಅಧ್ಯಯನ ಮಾಡುತ್ತಿದೆ. ತರಗತಿಗಳನ್ನು ಪಾಳಿಯ ಆಧಾರದಲ್ಲಿ ನಡೆಸಬೇಕಾ ಅಥವಾ ಪರ್ಯಾಯ ವ್ಯವಸ್ಥೆ ‌ಮಾಡಬೇಕಾ ಎಂಬ ಚರ್ಚೆಯೂ ನಡೆಯುತ್ತಿದೆ. ಸೋಮವಾರ ವೇಳೆಗೆ ಈ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಹೇಳಿದ್ದಾರೆ.

ನಾಲ್ಕನೇ ಹಂತದ ಲಾಕ್‌ಡೌನ್‌ ಕುರಿತಂತೆ ಶೀಘ್ರವೇ ಕೇಂದ್ರ ಸರ್ಕಾರದ ಮಾರ್ಗಸೂಚಿ ಕೂಡಾ ಬರಲಿದೆ. ಅಷ್ಟರದಲ್ಲಿ ರಾಜ್ಯ ಸರ್ಕಾರ ಶಾಲೆಗಳ ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆ ವಿಚಾರದ ಬಗ್ಗೆ ಮಾತನಾಡಿದ ಅವರು, ಪರೀಕ್ಷೆ ನಡೆಸುವ ವೇಳೆ ಮಕ್ಕಳ ಹಿತ ಕೂಡಾ ಕಾಪಾಡಬೇಕಾಗುತ್ತದೆ. ಮಕ್ಕಳಿಗೆ ತಮ್ಮ ಮನೆ ಪಕ್ಕದಲ್ಲೇ ಇರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡುವ ಬಗ್ಗೆಯೂ ಚರ್ಚೆಯೂ ನಡೆಯುತ್ತಿದೆ. ಈ ಎಲ್ಲಾ ಅಂಶಗಳ ಬಗ್ಗೆ ಸೋಮವಾರ ಚರ್ಚೆ ಮಾಡಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯೂ ಇದೆ ಎಂದರು.

ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ. ಈ ಹಿಂದೆ ಇದ್ದ ರೀತಿ ಜೂನ್ 1 ಕ್ಕೆ ಶಾಲೆ ಪುನಾರಂಭ ಸಾಧ್ಯತೆ ಕಡಿಮೆ. ಈ ವರ್ಷ ಯಾವುದೇ ಶಾಲೆಗಳು ಶುಲ್ಕದಲ್ಲಿ ಹೆಚ್ಚಳ ಮಾಡದಂತೆ ಸೂಚಿಸಿದ್ದೇವೆ, ಸಾಧ್ಯವಾದರೆ ಕಡಿಮೆ ಮಾಡಿ ಎಂದು ಸಲಹೆ ನೀಡಿದ್ದೇವೆ ಎಂದರು.

ಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ ಕೆಜಿ, ಯುಕೆಜಿ ಮಕ್ಕಳಿಗೂ ಆನ್ ಲೈನ್ ಕಲಿಕೆ ಸರಿಯಲ್ಲ. ಇದು ಹಾಸ್ಯಾಸ್ಪದ ಸಂಗತಿ. ಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಅನ್ ಲೈನ್ ಟೀಚಿಂಗ್ ಕ್ರೂರ ವ್ಯವಸ್ಥೆ ಮತ್ತು ಹಿಂಸೆ ಎಂದು ಹೇಳಿದ ಸಚಿವರು, ಇದರ ಬಗ್ಗೆ ಅಧ್ಯಯನ ಮಾಡುವಂತೆ ಇಲಾಖೆ ಆಯುಕ್ತರಿಗೆ ಸೂಚಿಸಿದ್ದೇನೆ. ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನೂ ನಾವು ಮಾಡುತ್ತೇವೆ ಎಂದರು.

ಖಾಸಗಿ ಶಾಲೆಗಳು ಸರ್ಕಾರದ ಸುತ್ತೋಲೆ ಹೊರಡಿಸುವವರೆಗೂ ಶಾಲಾ ಶುಲ್ಕ ಸಂಗ್ರಹಿಸುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಬಳಿಕ ಖಾಸಗಿ ಶಿಕ್ಷಣ ಸಂಸ್ಥೆಗಳವರು ಬಂದು ಸಂಬಳ ಪಾವತಿಸಲು ತೊಂದರೆ ಆಗುತ್ತಿದೆ ಎಂದು ಮನವಿ ಮಾಡಿದ್ದರು. ಹೀಗಾಗಿ ಪೋಷಕರಿಗೆ ಒತ್ತಾಯ ಮಾಡಿ ಶುಲ್ಕ ಸಂಗ್ರಹಿಸುವಂತಿಲ್ಲ, ಅವರು ಒಪ್ಪಿದರೆ ಸಂಗ್ರಹಿಸಬಹುದೆಂದು ಸೂಚಿಸಿದ್ದೆ. ಬಳಿಕ ಮೂರನೇ ಸುತ್ತೋಲೆ ಹೊರಡಿಸಿದ್ದು ಈ ವರ್ಷ ಶುಲ್ಕ ಹೆಚ್ಚಳ ಮಾಡುವಂತಿಲ್ಲ ಎಂದು ಸೂಚಿಸಿದ್ದೇವೆ ಎಂದರು.
ಬೇರೆ ಬೇರೆ ರೀತಿಯಲ್ಲಿ ಶಾಲೆಗಳು ಮಕ್ಕಳಿಗೆ, ಪೋಷಕರಿಗೆ ಹಿಂಸೆ ನೀಡುವಂತಿಲ್ಲ ಎಂದು ಕಟ್ಟು ನಿಟ್ಟಾಗಿ ಅಧಿಕಾರಿಗಳಿಗೆ ನಿಗಾವಹಿಸುವಂತೆ ಸೂಚಿಸಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಜೂನ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಜೂನ್ ಎರಡನೇ ಅಥವಾ ಮೂರನೇ ವಾರದಲ್ಲಿ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ. ಸದ್ಯ ಸರ್ಕಾರದಿಂದ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಆನ್ ಲೈನ್ ಮೂಲಕ ಪುನರ್ಮನನ ಕಾರ್ಯಕ್ರಮ ನಡೆಸಿಕೊಡಲಾಗುತ್ತಿದೆ. ಈ ಪುನರ್ಮನನ ಕಾರ್ಯಕ್ರಮ ಜೂನ್ ಮೊದಲ ವಾರದಲ್ಲಿ ಮುಗಿಯಲಿದೆ. ಪುನರ್ಮನನ ಕಾರ್ಯಕ್ರಮ ಮುಗಿದ ಬಳಿಕ ಎಸ್ಎಸ್ಎಲ್ ಸಿ‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com