ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಆಯುಷ್ ಇಲಾಖೆ ವೈದ್ಯರು :ತುರ್ತು ಸಭೆ ಕರೆದ ಆರೋಗ್ಯ ಸಚಿವರು

ಸಮಾನ ಕೆಲಸಕ್ಕಾಗಿ ಸಮಾನ ವೇತನ ನಿಯಮ ಜಾರಿಗೆ ಒತ್ತಾಯಿಸಿ ಮೇ 23 ರಿಂದ ಆಯುಷ್ ಇಲಾಖೆ ವೈದ್ಯರು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕೈಗೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಸಮಾನ ಕೆಲಸಕ್ಕಾಗಿ ಸಮಾನ ವೇತನ ನಿಯಮ ಜಾರಿಗೆ ಒತ್ತಾಯಿಸಿ ಮೇ 23 ರಿಂದ ಆಯುಷ್ ಇಲಾಖೆ ವೈದ್ಯರು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕೈಗೊಂಡಿದ್ದಾರೆ.

ಇಂದಿನಿಂದ ರಾಜ್ಯದ 2000 ಸರ್ಕಾರಿ ವೈದ್ಯರು ಹಾಗೂ 27000 ಖಾಸಗಿ ವೈದ್ಯರು ಹಾಗೂ 570 ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ರೋಗಿಗಳು ಮತ್ತು ಸಾರ್ವಜನಿಕರಿಗೆ ಸಮಸ್ಯೆ ಎದುರಾಗಿದೆ.

ಸಾಮೂಹಿಕವಾಗಿ ಕೆಲಸ ಸ್ಥಗಿತಗೊಳಿಸಿರುವ ಆಯುಷ್ ವೈದ್ಯರು, ಆಯುಷ್ ಫೆಡರೇಷನ್ ಆಫ್ ಇಂಡಿಯಾ ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗಳಿಗೆ ತೆರಳಿ ನಿನ್ನೆಯಷ್ಟೇ ಮನವಿ ಪತ್ರ ಸಲ್ಲಿಸಿದ್ದರು. 

ಮನವಿ ಪತ್ರದಲ್ಲಿ, ರಾಜ್ಯ ಸರ್ಕಾರ 300 ಆಯುಷ್ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡು ಎಂಬಿಬಿಎಸ್ ವೈದ್ಯರು ಇಲ್ಲದ ಕಡೆಗಳಲ್ಲಿ ಆರೋಗ್ಯ ಕೇಂದ್ರಗಳನ್ನು ನಡೆಸುತ್ತಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 650 ಹಾಗೂ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ 1,000 ಆಯುಷ್ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. 

ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 16 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ ಮಾಸಿಕ ರೂ. 20,300, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿಯ ವೈದ್ಯರಿಗೆ ರೂ. 31,440 ಹಾಗೂ ಎಂಬಿಬಿಎಸ್ ವೈದ್ಯರು ಇಲ್ಲದ ಕಡೆ ಕೆಲಸ ನಿರ್ವಹಿಸುತ್ತಿರುವ ಆಯುಷ್ ವೈದ್ಯರಿಗೆ ರೂ. 26,000 ವೇತನ ಮಾತ್ರ ಕೊಡಲಾಗುತ್ತಿದೆ. 16 ವರ್ಷಗಳ ಅವಧಿಯಲ್ಲಿ ಒಂದು ಬಾರಿ ಮಾತ್ರ ಕೇವಲ ಶೇ 5 ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. 

ಆರೋಗ್ಯ ಉಪ ಕೇಂದ್ರಗಳಲ್ಲಿ ಮಿಡಲ್ ಲೇವರ್ ಹೆಲ್ತ್ ಪ್ರೋವೈಡರ್ ಆಗಿರುವ ಬಿ.ಎಸ್ಸಿ ನರ್ಸಿಂಗ್ ಪದವೀಧರರಿಗೆ ರೂ. 32,000 ವೇತನ ಕೊಡಲಾಗುತ್ತಿದೆ. ಆದರೆ, ಆಯುಷ್ ವೈದ್ಯರಿಗೆ ಕೇವಲ ರೂ. 20,000 ವೇತನ ನೀಡಲಾಗುತ್ತಿದೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com