ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು ವಿವಾದ: ವಿರೋಧ ಹಿನ್ನೆಲೆ ಉದ್ಘಾಟನೆ ಕಾರ್ಯಕ್ರಮ ಮುಂದೂಡಿಕೆ
ಬೆಂಗಳೂರು: ಯಲಹಂಕ ಡೈರಿ ವೃತ್ತದ ನೂತನ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ಮಾಡುವುದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಿದೆ.
ಯಲಹಂಕದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಸುಮಾರು ರೂ.34 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಿಸಿದ್ದು, ಗುರುವಾರ ಬೆಳಿಗ್ಗೆ 9.30ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇಲ್ಸೇತುವೆಯನ್ನು ಲೋಕಾರ್ಪಣೆಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಆದರೆ, ಬುಧವಾರ ಮೇಲ್ಸೇತುವೆಗೆ ವೀರ ಸಾವರ್ಕರ್ ಮೇಲ್ಸೇತುವೆ ಹೆಸರು ನಾಮಕರಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸೇರಿದಂತೆ ಹಲವು ಮುಕಂಡರು ಹಾಗೂ ವಿವಿಧ ಕನ್ನಡಪರ ಸಂಘಟನೆಗಲು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಮೇಲ್ಸೇತುವೆ ಉದ್ಘಾಟನೆ ಸಮಾರಂಭವನ್ನು ಮುಂದೂಡಿದೆ.
ಕೊರೋನಾ ಲಾಕ್'ಡೌನ್ ಹಾಗೂ ಬಿಬಿಎಂಪಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿರುವ ಎರಡು ಕಾರಣಗಳಿಂದಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್ಆರ್.ವಿಶ್ವನಾಥ್ ಅವರು ಹೇಳಿದ್ದಾರೆ.
ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಆದರೆ, ಜೂನ್ ತಿಂಗಳಿನಲ್ಲಿ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.
ನೂತನ ಮೇಲ್ಸೇತುವೆಗೆ ವೀರ ಸಾವರ್ಕರ್ ಮೇಲ್ಸೇತುವೆ ಹೆಸರು ನಾಮಕರಣಕ್ಕೆ ಫೆ.29ರ ಮಾಸಿಕ ಸಬೆಯಲ್ಲಿ ಬಿಬಿಎಂಪಿ ನಿರ್ಣಯ ತೆಗೆದುಕೊಂಡಿತ್ತು. ಸಾವರ್ಕರ್ ಹೆಸರು ನಾಮಕರಣ ಕುರಿತು ಮೇ.20ರಂದು ಬಿಬಿಎಂಪಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ.
ಆಕ್ಷೇಪಣೆ ಸಲ್ಲಿಸಲು ಜೂನ್20ರವರೆಗೆ ಕಾಲಾವಕಾಶವಿದೆ. ತದನಂತರ ಬಿಬಿಎಂಪಿಯು ಸಾರ್ವಜನಿಕರ ಆಕ್ಷೇಪಣೆಗಲನ್ನು ಪರಿಷ್ಕರಿಸಿ ಸರ್ಕಾರಕ್ಕೆ ಕಳುಹಿಸಿಕೊಡಲಾಗುತ್ತದೆ. ಆ ನಂತರ ಸರ್ಕಾರ ಅಂತಿಮ ಅದಿಸೂಚನೆ ಹೊರಡಿಸಲಿದೆ. ಈ ಎಲ್ಲಾ ಪ್ರಕ್ರಿಯೆ ಬಾಕಿ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ನೂತನ ಮೇಲ್ಸೇತುವೆ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.