ಬೆಂಗಳೂರು: ಈ ವರ್ಷದ ಡಿಸೆಂಬರ್ ನಲ್ಲಿ ನಡೆಯಬೇಕಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯನ್ನು 2021ರ ಫೆಬ್ರವರಿಗೆ ಮುಂದೂಡುವ ಸಾಧ್ಯತೆಯಿದೆ. ಡಾ.ಎಂ.ಕೆ ಸುದರ್ಶನ್ ನೇತೃತ್ವದ ತಜ್ಞರ ಸಮಿತಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದು ಅಪಾಯಕಾರಿ ಎಂದಿದೆ.
ಚುನಾವಣೆ ನಡೆಸುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುವ ಸಾಧ್ಯತೆಯಿದೆ ಎಂದು ತಿಳಿಸಿದೆ. ನಾವು ಚುನಾವಣೆ ನಡೆಸಿದ್ದೇ ಆದರೆ ಕೊರೋನಾ ಸೋಂಕನ್ನು ನಾವೇ ಮನೆ ಬಾಗಿಲಿಗೆ ತಂದು ಕೂರಿಸಿದಂತಾಗುತ್ತದೆ ಎಂದು ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆ ಸದ್ಯಕ್ಕೆ ಬೇಡ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಮನೆಮನೆಗೆ ಕೋವಿಡ್ ತಲುಪಿಸಿದಂತೆ ಆಗುತ್ತದೆ. ಫೆಬ್ರವರಿವರೆಗೆ ಚುನಾವಣೆ ಮುಂದೂಡುವುದು ಒಳಿತು ಎಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ ಎಂದು ಸಚಿವ ಕೆ. ಸುಧಾಕರ್ ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸ ಬೇಕಾಗುತ್ತದೆ, ಇದರಿಂದ ಸೋಂಕು ಹರಡುವ ಸಾಧ್ಯತೆಯಿರುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಗ್ರಾಮ ಪಂಚಾಯಿತಿ ಚುನಾವಣೆಯನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗ ಸರ್ಕಾರಕ್ಕೆ ಸೂಚಿಸಿತ್ತು, ಸದ್ಯ ಪ್ರಕರಣ ನ್ಯಾಯಾಲಯದಲ್ಲಿದ್ದು, ಕೋರ್ಟ್ ಮತ್ತು ಆಯೋಗ ಚುನಾವಣಾ ದಿನಾಂಕವನ್ನು ನಿಗದಿ ಪಡಿಸಲಿದೆ, ಆದರೆ ನಾವು ಚುನಾವಣೆಯನ್ನು ಫೆಬ್ರವರಿಗೆ ಮುಂದೂಡುವಂತೆ ಮನವಿ ಮಾಡಿದ್ದೇವೆ ಎಂದು ಸುಧಾಕರ್ ತಿಳಿಸಿದ್ದಾರೆ.
ಈ ಚುನಾವಣೆಗಳ ನಂತರ ಗ್ರಾಮೀಣ ಪ್ರದೇಶಗಳಲ್ಲಿನ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಾಗಬಹುದು ಎಂದು ತಜ್ಞರ ಸಮಿತಿ ತಿಳಿಸಿದೆ. 50,000 ಕ್ಕೂ ಹೆಚ್ಚು ಬೂತ್ಗಳನ್ನು ಸ್ಥಾಪಿಸಬೇಕಾಗಿದ್ದು, ರಾಜ್ಯದ ಎಲ್ಲಾ 6,021 ಪಂಚಾಯಿತಿಗಳಿಂದ ಲಕ್ಷಾಂತರ ಜನರು ಸ್ಪರ್ಧಿಸಲಿದ್ದಾರೆ. ಈ ವೇಳೆ ಜನರು ಸಾಮಾಜಿಕ ಅಂತರ ಕಾಪಾಡುವುದು ಕಷ್ಟ.
ಹರಡುವಿಕೆಯನ್ನು ತಡೆಗಟ್ಟಲು ನಾವು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ. ಆರ್.ಆರ್.ನಗರ ಮತ್ತು ಸಿರಾ ಉಪಚುನಾವಣೆಗಳಲ್ಲಿ ಅನೇಕ ಜನರು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ನಾವು ರಿಸ್ಕ್ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಸುಧಾಕರ್ ಹೇಳಿದರು.
Advertisement