ಸಿಎಂ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್, ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷರಾಗಿ ಮಾನಪ್ಪ ವಜ್ಜಲ್ ನೇಮಕ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಕೆಲ ದಿನಗಳ ಹಿಂದಷ್ಟೇ ರಾಜೀನಾಮೆ ನೀಡಿದ್ದರು.
ಮಹದೇವ್ ಪ್ರಕಾಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸುವಂತೆ ಸಿಎಂ ಮುಖ್ಯ ಕಾರ್ಯದರ್ಶಿಗೆ ಯಡಿಯೂರಪ್ಪ ಅವರು ಮಂಗಳವಾರ ಸೂಚಿಸಿದ್ದರು.
ಇದರಂತೆ ಎನ್.ಭೃಂಗೀಶ್ ಅವರನ್ನು ಕೂಡಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ಇದೇ ವೇಳೆ ಮಾಜಿ ಶಾಸಕ ಮಾನಪ್ಪ ಡಿ.ವಜ್ಜಲ್ ರನ್ನು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರನ್ನಾಗಿ, ಹಾಗೂ ಎಸ್.ಲಿಂಗಮೂರ್ತಿ ಇವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪುರೇಷನ್ ಅಧ್ಯಕ್ಷರಾಗಿ ನೇಮಕ ಗೊಳಿಸಿ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ