ಬೆಂಗಳೂರು: ಬಿಬಿಎಂಪಿ ವಾರ್ಡ್'ಗಳ ಸಂಖ್ಯೆಯನ್ನು ಈಗಿನ 198ರಿಂದ 243ಕ್ಕೆ ಹೆಚ್ಚಿಸುವ ಸಂಬಂಧ ವಾರ್ಡ್ ಮರುವಿಂಗಡಣೆಗೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ವಾರ್ಡ್ ಗಳ ಸಂಖ್ಯೆ ಹೆಚ್ಚಿಸುವ ಹಾಗೂ ಮರುವಿಂಗಡಣೆ ಸಂಬಂಧ ಕರ್ನಾಟಕ ನಗರ ಪಾಲಿಕೆಗಳ (3ನೇ ತಿದ್ದುಪಡಿ) ಅಧಿನಿಯಮಕ್ಕೆ ರಾಜ್ಯಪಾಲರು ಇತ್ತೀಚೆಗೆ ಒಪ್ಪಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಯಂತೆ ಮರು ವಿಂಗಡಣೆಗೆ ಸಮಿತಿ ರಚಿಸಲಾಗಿದ್ದು, ಸಮಿತಿಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಡಿಎ ಆಯುಕ್ತ ಹಾಗೂ ಬಿಬಿಎಂಪಿಯ ವಿಶೇಷ ಆಯುಕ್ತ (ಕಂದಾ)ರು ಸಹ ಸದಸ್ಯರಾಗಿದ್ದಾರೆ.
ಪ್ರಸ್ತುತ ಪಾಲಿಕೆ ವಾರ್ಡ್ ಮರುವಿಂಗಡಣೆ ಮಾಡುವುದಕ್ಕೆ ಸಮಿತಿ ರಚನೆ ಮಾಡಲಾಗಿದೆ. ಗಡಿ ನಿರ್ಧಾರ ಆಯೋಗವನ್ನು ಮುಂದಿನ ವಾರ ರಚನೆ ಮಾಡುವ ಸಾಧ್ಯತೆ ಇದೆ. ವಾರ್ಡ್ ಸಂಖ್ಯೆ ಹೆಚ್ಚಳ ಮಾಡುವಾಗ ವಿಧಾನಸಭಾ ಕ್ಷೇತ್ರದ ವಾರ್ಡ್'ಗಳನ್ನು ಅದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಪುನರ್ ವಿಂಗಡಣೆ ಮಾಡಿ ವಾರ್ಡ್ ಸಂಖ್ಯೆ ಹೆಚ್ಚಳ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಒಂದು ವಿಧಾನಸಬಾ ಕ್ಷೇತ್ರದ ವಾರ್ಡುಗಳನ್ನು ಮತ್ತೊಂದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರ್ಪಡೆ ಮಾಡುವಂತಿಲ್ಲ. ಈ ಬಗ್ಗೆ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ.
Advertisement