ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವ್ಯಾಪಕವಾಗುತ್ತಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ತಪಾಸಣೆ ಕೈಗೊಳ್ಳಲು ಸ್ಥಾಪನೆ ಮಾಡಲಾಗಿರುವ ಮೊಬೈಲ್ ಬೂತ್'ಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಚಾಲನೆ ನೀಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ವೈರಸ್ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೀಗಾಗಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ತಪಾಸಣೆಗಳ ಅಗತ್ಯವಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಮೊಬೈಲ್ ಬೂತ್'ಗಳನ್ನು ಆರಂಭಿಸಿದೆ.
ಇದೀಗ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೋವಿಡ್ ಟೆಸ್ಟಿಂಗ್ ಮೊಬೈಲ್ ಬೂತ್'ಗೆ ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ.
ಮೊಬೈಲ್ ಟೆಸ್ಟಿಂಗ್ ಬೂತ್ ಮೂಲಕ ಇನ್ನು ಮುಂದೆ ಪ್ರತೀತ ವಾರ್ಡ್ ನಲ್ಲಿಯೂ ಈ ಬೂತ್ ಕಾರ್ಯನಿರ್ವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟಿಂಗ್ ನಡೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.
ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ಕರ್ನಾಟಕದಲ್ಲಿ ಕಡಿಮೆ ಸಂಖ್ಯೆಯಲ್ಲಿ ತಪಾಸಣೆ ಮಾಡಲಾಗುತ್ತಿದೆ ಎಂಬ ಆರೋಪಗಳು ಈ ಹಿಂದೆ ಕೇಳಿ ಬಂದಿತ್ತು.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೊಬೈಲ್ ಬೂತ್ ಗಳನ್ನು ಸ್ಥಾಪನೆ ಮಾಡಿ, ತಪಾಸಣೆ ಸಂಖ್ಯೆಯನ್ನು ಹೆಚ್ಚಿಸಲಿದೆ. ಮೊಬೈಲ್ ಬೂತ್ ಗಳ ಮೂಲಕ ಜನರು ಇದ್ದಲ್ಲಿಗೆ ಹೋಗಿ ತಪಾಸಣೆ ನಡೆಸಲಾಗುತ್ತದೆ.
Advertisement