ನಿಖಿಲ್ ವಿವಾಹ: ಸಹೃದಯದ ಮಾತುಗಳನ್ನಾಡಿದ ಮುಖ್ಯಮಂತ್ರಿಗೆ ಮನದಾಳದ ಧನ್ಯವಾದ: ಎಚ್ ಡಿ ಕುಮಾರಸ್ವಾಮಿ

ನಿಖಿಲ್-ರೇವತಿ ವಿವಾಹ ಸಂಬಂಧ ಮುಖ್ಯಮಂತ್ರಿಗಳ ನಿಲುವಿಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಧನ್ಯವಾದ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಿಖಿಲ್-ರೇವತಿ ವಿವಾಹ ಸಂಬಂಧ ಮುಖ್ಯಮಂತ್ರಿಗಳ ನಿಲುವಿಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಧನ್ಯವಾದ ಹೇಳಿದ್ದಾರೆ.

ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು.

ಆದರೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯರಾಜಕಾರಣದ  ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು ಎಂದು ತಿಳಿಸಿದ್ದಾರೆ.

'ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು. ಶಾಸಕರು, ಕಾರ್ಯಕರ್ತರು, ಮುಖಂಡರು, ಕುಟುಂಬದ ಹಿತೈಷಿಗಳು  ಸೇರಿದಂತೆ ನಾಡಿನ ಲಕ್ಷಾಂತರ ಜನರು ನನ್ನ ಕುಟುಂಬದ ಕುಡಿಯ ವಿವಾಹಕ್ಕೆ ಮನೆಯಿಂದಲೇ ಹರಸಿದ್ದೀರಿ. ನಾನು ಮತ್ತು ನನ್ನ ಕುಟುಂಬ ವರ್ಗ ಮಾಡಿದ ಮನವಿಗೆ ನೀವುಗಳು ಸ್ಪಂದಿಸಿದ ರೀತಿ ಅನುಕರಣೀಯ ಮತ್ತು ಮಾದರಿಯಾಗಿದೆ. ಜಗತ್ತು ಸದ್ಯ ಎದುರಿಸುತ್ತಿರುವ ಈ  ಗಂಡಾಂತರ ಕಳೆದು ಪರಿಸ್ಥಿತಿ ಸಹಜವಾದಾಗ ನಾವು ಮತ್ತು ನೀವುಗಳು ಜತೆ ಸೇರಿ ಒಟ್ಟಿಗೆ ಕುಳಿತು ಊಟ ಮಾಡೋಣ. ನಿಮ್ಮ ಹೃದಯ ವೈಶಾಲ್ಯ ಮತ್ತು ಪ್ರೀತಿಗೆ ನಾವುಗಳು ಸದಾ ಋಣಿ. ನವದಂಪತಿಗೆ ಹರಸಿದ ಪ್ರತಿಯೊಬ್ಬರಿಗೂ ಮತ್ತೊಮ್ಮೆ ಹೃದಯ ತುಂಬಿದ ಕೃತಜ್ಞತೆಗಳು  ಎಂದು ಹೇಳಿದ್ದಾರೆ.

ಅಂತೆಯೇ ಮದುವೆ ವಿಚಾರದಲ್ಲೂ ರಾಜಕೀಯ ಮಾಡುತ್ತಿರುವವರ ವಿರುದ್ಧ ಕಿಡಿಕಾರಿರುವ ಕುಮಾರಸ್ವಾಮಿ, 'ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ   ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ  ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ, ಮುಖ್ಯಮಂತ್ರಿ  ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ. ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು  ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು. ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ  ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com