ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದು, 60 ಪೊಲೀಸರಿಗೆ ಗಾಯಗಳಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಬೆಂಗಳೂರಿನ ಕಾವಲ್ ಭೈರಸಂದ್ರ, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ನಡೆದ ಗಲಭೆ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದು, 60 ಪೊಲೀಸರಿಗೆ ಗಾಯಗಳಾಗಿವೆ. ಅಂತೆಯೇ ಪೊಲೀಸ್ ಠಾಣೆ ಮೇಲೆ ಸುಮಾರು 250ರಿಂದ 350ರಷ್ಟು ದಷ್ಕರ್ಮಿಗಳು ದಾಳಿ ಮಾಡಿದ್ದು, ಈ ವೇಳೆ ಪೊಲೀಸ್ ಠಾಣೆಯ ಪಾರ್ಕಿಂಗ್ ಜಾಗದಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು, ಕೆಲವರಿಗೆ ಗುಂಡೇಟಿನಿಂದ ಗಾಯಗಳಾಗಿವೆ. ಯಾರೂ ರಸ್ತೆಯಲ್ಲಿಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದರಿಂದ ಗುಂಡಿನ ದಾಳಿ ನಡೆಸಲಾಗಿದೆ. ಪೊಲೀಸರ ಮೇಲೆ ಕಲ್ಲು, ಬಾಟಲ್ ಗಳಿಂದ ದಾಳಿ ನಡೆದಿತ್ತು. ಈಗ ಕರ್ಪ್ಯೂ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ವರಿಷ್ಠಾಧಿಕಾರಿಗಳ ಭೇಟಿ
ಇನ್ನು ದುಷ್ಕರ್ಮಿಗಳು ದಾಳಿ ನಡೆಸಿದ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಉಪಾಯುಕ್ತ ಜಿಎನ್ ಶಿವಮೂರ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಠಾಣೆಯಲ್ಲಿ ದಾಳಿಯಿಂದಾಗಿ ಸಾಕಷ್ಟು ಆಸ್ತಿ-ಪಾಸ್ತಿ ನಷ್ಟವಾಗಿದೆ. ಈ ಮೂಲಕ ನಾನು ನಗರದ ಜನತೆಗೆ ಮನವಿ ಮಾಡುತ್ತಿದ್ದು, ಪ್ರಚೋದನಕಾರಿ ಹೇಳಿಕೆಗಳಿಗೆ ಕಿವಿಗೊಡಬೇಡಿ ಮತ್ತು ಪ್ರಚೋದನೆಗೊಳಗಾಗಿ ಮತ್ತೊಬ್ಬರಿಗೆ ತೊಂದರೆ ಮಾಡಬೇಡಿ ಎಂದು ಹೇಳಿದ್ದಾರೆ.
Advertisement