ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಕೆ.ಆರ್.ಮಾರುಕಟ್ಟೆಯನ್ನು ತಿಂಗಳ ಕೊನೆಯಲ್ಲಿ ತೆರೆಯಲು ಅನುಮತಿ ನೀಡುವ ಸಾಧ್ಯತೆ ಇರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೂಡಲೆ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಮೇಯರ್ ಗೌತಮ್ ಕುಮಾರ್ ಸೂಚನೆ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆ.ಆರ್.ಮಾರುಕಟ್ಟೆ ತೆರೆಯುವ ಹಾಗೂ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವತಿಯಿಂದ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ವೀಕ್ಷಿಸಿದ ಅವರು, ರಸ್ತೆ ಮಾರ್ಗದಲ್ಲಿರುವ ತ್ಯಾಜ್ಯವನ್ನು ಕೂಡಲೆ ತೆರವುಗೊಳಿಸಬೇಕು. ಸ್ವಚ್ಛತೆ ಕಾಪಾಡಬೇಕು. ಮಾರುಕಟ್ಟೆ ಪ್ರಾರಂಭವಾದರೆ ಸೋಂಕು ನಿವಾರಣಾ ಔಷಧಿ ಸಿಂಪಡಣೆ ಮಾಡಲು ಕ್ರಮವಹಿಸಬೇಕು ಎಂದು ಸೂಚಿಸಿದರು. ಕೆ.ಆರ್.ಮಾರುಕಟ್ಟೆ ಬಳಿ ಜಲಮಂಡಳಿ ವತಿಯಿಂದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಜಂಟಿ ಕಾರ್ಯಾಚರಣೆ ನಡೆಸಿ ಕೂಡಲೆ ಸಮಸ್ಯೆ ಬಗೆಹರಿಸುವಂತೆ ಜಲಮಂಡಳಿ ಮುಖ್ಯ ಅಭಿಯಂತರರು, ಪಶ್ಚಿಮ ವಲಯ ಮುಖ್ಯ ಅಭಿಯಂತರರಿಗೆ ನಿರ್ದೇಶನ ನೀಡಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಮೇಯರ್ ಗೌತಮ್ ಕುಮಾರ್ ಅವರು, 'ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಸಂಬಂಧ ಕೆ.ಆರ್.ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು.ಇದೀಗ ತಿಂಗಳ ಕೊನೆಯಲ್ಲಿ ಮಾರುಕಟ್ಟೆ ತೆರೆಯಲು ಸರ್ಕಾರ ಅನುಮತಿ ನೀಡುವ ಸಾಧ್ಯತೆ ಇದ್ದು, ಮುಂಚಿತವಾಗಿ ತೆಗೆದುಕೊಳ್ಳಬೇಕಾದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೂಡಲೆ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಅಂತೆಯೇ ಕೆ.ಆರ್.ಮಾರುಕಟ್ಟೆ ಬಳಿ ಜಲಮಂಡಳಿ ವತಿಯಿಂದ ನಡೆಯುತ್ತಿರುವ ಕಾಮಗಾರಿಗೆ ಸಂಬಂಧಪಟ್ಟ ಅಧಿಕಾರಿಗಳು ನಾಳೆ ಬಂದು ಜಂಟಿ ಕಾರ್ಯಾಚರಣೆ ನಡೆಸಿ ಸಮಸ್ಯೆ ಪರಿಹರಿಸಬೇಕು.ಮಾರುಕಟ್ಟೆ ಪ್ರಾರಂಭವಾದರೆ ಸೋಂಕುನಿವಾರಕ ಔಷಧಿ ಸಿಂಪಡಿಸಬೇಕು,ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಲಾಯಿತು ಎಂದು ಹೇಳಿದ್ದಾರೆ.
Advertisement