ಹೊರ ರಾಜ್ಯಗಳಿಗೆ ಸಾರಿಗೆ ಬಸ್ ಸಂಚಾರ ಆರಂಭಿಸಲು ಕ್ರಮ: ಡಿಸಿಎ ಸವದಿ

ದೇಶಾದ್ಯಂತ ಲಾಕ್ಡೌನ್ ಸಡಿಲಗೊಂಡಿರುವುದರಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ. 
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ

ಬೆಂಗಳೂರು: ದೇಶಾದ್ಯಂತ ಲಾಕ್ಡೌನ್ ಸಡಿಲಗೊಂಡಿರುವುದರಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ. 

ಇತರೆ ರಾಜ್ಯಗಳಿಗೆ ಅದರಲ್ಲೂ ಮುಖ್ಯವಾಗಿ ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಪುನಃ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಬಸ್ ಸಂಚಾರಕ್ಕೆ ಸಜ್ಜಾಗಿವೆ. ಆದರೆ ಪಕ್ಕದ ಈ ಎಲ್ಲಾ ರಾಜ್ಯಗಳಿಂದ ಇದಕ್ಕೆ ಹಸಿರು ನಿಶಾನೆ ದೊರೆಯಬೇಕಿದೆ. ನಂತರ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

ಪರಿಸ್ಥಿತಿ ಸುಧಾರಣೆಗೊಂಡ ನಂತರ ಮೊದಲ ಹಂತದಲ್ಲಿ ರಾಜ್ಯದಿಂದ ಆಂಧ್ರ ಪ್ರದೇಶಕ್ಕೆ ಸರ್ಕಾರಿ ಸಾರಿಗೆ ಬಸ್ ಸಂಚಾರ ಪ್ರಾರಂಭಿಸಲಾಗಿದೆ. ಸಾರ್ವಜನಿಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೋರಿ ನಮ್ಮ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದೆ ಎಂದಿದ್ದಾರೆ.

ಅಲ್ಲದೆ ಆಯಾ ಸಾರಿಗೆ ಸಂಸ್ಥೆಗಳಲ್ಲಿ ಇದಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಈ ಎಲ್ಲಾ ರಾಜ್ಯಗಳಿಂದ ಶೀಘ್ರವೇ ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆಯಬಹುದು ಎಂಬ ನಿರೀಕ್ಷೆಯೂ ಇದೆ. ಹೀಗೆ ಆಯಾ ರಾಜ್ಯಗಳಿಂದ ವ್ಯಕ್ತವಾಗುವ ಪ್ರತಿಕ್ರಿಯೆಗಳನ್ನು ಆಧರಿಸಿ ಪುನಃ ಬಸ್ ಸಂಚಾರ ಪ್ರಾರಂಭಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದಿದ್ದಾರೆ.

ಲಾಕ್‍ಡೌನ್‍ಗಿಂತ ಮುಂಚೆ ನಮ್ಮ ರಾಜ್ಯದಿಂದ ಒಟ್ಟು 2500 ಸರ್ಕಾರಿ ಬಸ್‍ಗಳು ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿದ್ದವು. ಈಗ ಮುಂಚಿನಂತೆ ಮತ್ತೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com