ಬೆಂಗಳೂರು: ನಿವಾರ್ ಚಂಡಮಾರುತದ ಪರಿಣಾಮದಿಂದಾಗಿ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ದಕ್ಷಿಣ ಭಾರತದ ಜಿಲ್ಲೆಗಳಲ್ಲಿ ಪ್ರಮುಖವಾಗಿ ಬೆಂಗಳೂರಿನಲ್ಲಿ ಮತ್ತೊಂದು ಚಂಡಮಾರುತದ ಭೀತಿ ಆರಂಭವಾಗಿದ್ದು, ಡಿಸೆಂಬರ್ ನಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿವಾರ್ ಸೃಷ್ಟಿಸಿದ್ದ ಅವಾಂತರದಿಂದ ಇನ್ನೂ ಚೇತರಿಸಿಕೊಂಡಿಲ್ಲ ಅದಾಗಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಂಗಳೂರಿನಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಮಾತ್ರವಲ್ಲದೇ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇದೇ ವಾರಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿ ಸೃಷ್ಟಿಯಾಗತ್ತಿರುವ ಚಂಡಮಾರುತ ವಾಯುವ್ಯ ದಿಕ್ಕಿನಲ್ಲಿ ಸಂಚರಿಸಲಿದ್ದು, ದಕ್ಷಿಣ ಭಾರತದ ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ. ಡಿಸೆಂಬರ್ 3-4ರ ವೇಳೆಗೆ ಈ ಚಂಡಮಾರುತ ದಕ್ಷಿಣ ಭಾರತದತ್ತ ಧಾವಿಸಲಿದ್ದು, ಈ ವೇಳೆ ದಕ್ಷಿಣ ಕರ್ನಾಟಕದ ಒಳ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ.
ಅಂತೆಯೇ ತೀವ್ರವಾದ ಗಾಳಿ ಮತ್ತು ಮೋಡ ಮುಸುಕಿದ ವಾತಾವರಣ ಇರಲಿದ್ದು, ಇದು ಬೆಂಗಳೂರಿನ ಚಳಿಯನ್ನು ಮತ್ತಷ್ಟು ತೀವ್ರಗೊಳಿಸುತ್ತದೆ. ತಾಪಮಾನ ಕುಸಿಯಲಿದ್ದು, ಡಿಸೆಂಬರ್ ನಲ್ಲಿ ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಅಂತೆಯೇ ಹವಾಮಾನ ಇಲಾಖೆ ಅಧಿಕಾರಿಗಳು ಆಗ್ನೇಯ ಅರೇಬಿಯನ್ ಸಮುದ್ರದಲ್ಲೂ ಚಂಡಮಾರುತ ಸೃಷ್ಟಿಯಾಗತ್ತಿರುವ ಕುರಿತು ಮಾಹಿತಿ ನೀಡಿದ್ದು, ಕೇರಳದ ಕರಾವಳಿ ತೀರಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ.
Advertisement