ಬೆಂಗಳೂರು: ವಿವಿಧ ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.ಬಂದ್ ಹಿಂಪಡೆಯುವಂತೆ ಕನ್ನಡ ಸಂಘಟನೆಗಳನ್ನು ಮನವಿ ಮಾಡಿಕೊಂಡಿದ್ದಾರೆ.
ಬಂದ್ ಮಾಡಿದರೆ ಜನರಿಗೆ, ನಿತ್ಯ ಚಟುವಟಿಕೆಗಳಿಗೆ ಸಾಕಷ್ಟು ತೊಂದರೆಯಾಗುತ್ತದೆ. ಹೀಗಾಗಿ ಬಂದ್ ಮಾಡುವ ಅಗತ್ಯವಿಲ್ಲ. ಸಮಾಜದ ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ಕೊಂಡೊಯ್ದು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡುತ್ತೇನೆ ಎಂದು ಸಿಎಂ ಭರವಸೆ ನೀಡಿದ್ದಾರೆ.
ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದು ಎಲ್ಲಾ ರಾಜ್ಯಗಳಲ್ಲಿ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ಗೆ ಪೊಲೀಸ್ ಆಯುಕ್ತರು ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳುವಂತೆ ಸೂಚಿಸಿದ್ದು, ಡಿ. 5ರ ಬೆಳಗ್ಗೆ 4:30ರಿಂದ ಹೊಯ್ಸಳ ಪೊಲೀಸ್ ಸಿಬ್ಬಂದಿ ಗಸ್ತು ತಿರುಗಲಿದ್ದಾರೆ. ಇನ್ನು, ವಿಶೇಷವಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗುತ್ತಿದೆ.
ನಿನ್ನೆ ಪ್ರತಿಕ್ರಿಯೆ ನೀಡಿದ್ದ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ಮರಾಠ ಪ್ರಾಧಿಕಾರ ರಚನೆ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು, ಇಲ್ಲದಿದ್ದರೆ ಕರ್ನಾಟಕ ಬಂದ್ ನೂರಕ್ಕೆ ನೂರರಷ್ಟು ನಡೆಯುವುದು ಖಚಿತ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕನ್ನಡಿಗರ ನಡುವಿನ ಸವಾಲ್ ಆಗಿದೆ ಎಂದು ಹೇಳಿದ್ದಾರೆ.
Advertisement