ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗುವುದು ಎಂದು ಕಾನೂನು ಸಚಿವ ಜೆ.ಮಾಧುಸ್ವಾಮಿಯವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರಕ್ಕೂ ಕೂಡ ಬಿಬಿಎಂಪಿ ಚುನಾವಣೆ ಮಾಡಬೇಕು ಎಂಬ ಇಚ್ಛೆ ಇದೆ. ಮುಂಚಿತವಾಗಿಯೇ ವಾರ್ಡ್'ಗಳ ಮರುವಿಂಗಡಣೆ ಮಾಡಲಾಗಿದೆ. 243 ವಾರ್ಡ್ ಪುನರ್ ವಿಂಗಡಣೆ ಮಾಡಿದ ಬಳಿಕ ಚುನಾವಣೆ ನಡೆಸಲು ಆಗುವುದಿಲ್ಲ. ಹೀಗಾಗಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್'ಗೆ ಮೇಲ್ಮನವಿ ಸಲ್ಲಿಸುತ್ತೇವೆಂದು ಹೇಳಿದ್ದಾರೆ.
2021ರಲ್ಲಿ ಹೊಸ ಜನಗಣತಿ ನಡೆದರೆ ಜನಸಂಖ್ಯೆಯಲ್ಲಿ ಏರಿಳಿತವಾಗುತ್ತದೆ. ಜನಸಂಖ್ಯೆ ಆಧಾರದ ಮೇಲೆ ಮತ್ತಷ್ಟು ವಿಳಂಬವಾಗಬಹುದು. ಹಾಗಾಗಿ ಸುಪ್ರೀಂ ಕೋರ್ಟ್'ಗೆ ಮೇಲ್ಮನವಿ ಸಲ್ಲಿಸಲಾಗುವುದು. ಇದಕ್ಕೆ ಎಲ್ಲಾ ಪಕ್ಷದ ಒಪ್ಪಿಗೆ ಇದೆ ಎಂದು ತಿಳಿಸಿದ್ದಾರೆ.
Advertisement