'ಫ್ರೀ ಕಾಶ್ಮೀರ' ಫಲಕ ಪ್ರದರ್ಶನ ಪ್ರಕರಣ: ಮೈಸೂರು ವಕೀಲರ ಸಂಘಕ್ಕೆ 'ಹೈ' ನೋಟಿಸ್

ಸಿಎಎ, ಎನ್ಆರ್'ಸಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಎಂದು ಭಿತ್ತಿಪತ್ರ ಪ್ರದರ್ಶಿಸಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾದ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡ ಮೈಸೂರು ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ನಳಿನಿ ಬಾಲಕುಮಾರ್
ನಳಿನಿ ಬಾಲಕುಮಾರ್

ಬೆಂಗಳೂರು: ಸಿಎಎ, ಎನ್ಆರ್'ಸಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಎಂದು ಭಿತ್ತಿಪತ್ರ ಪ್ರದರ್ಶಿಸಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾದ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡ ಮೈಸೂರು ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. 

ಸಂಘದ ನಿರ್ಣಯ ಪ್ರಶ್ನಿಸಿ ವಕೀಲ ಎಲ್.ರಮೇಶ್ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಾಪೀಠ ಮಂಗಲವಾರ ವಿಚಾರಣೆ ನಡೆಸಿತು. 

ಕೆಲ ಕಾಲ ವಾದ ಆಲಿಸಿದ ನ್ಯಾಯಾಪೀಠ, ಪ್ರತಿವಾದಿಗಳಾದ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಹಾಗೂ ಮೈಸೂರು ಜಿಲ್ಲಾ ವಕೀಲರ ಸಂಘಕ್ಕೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. 

ಯಾರೇ ಆರೋಪಿ ಪರ ವಕಾಲತ್ತು ಹಾಕಬಾರದು ಎಂದು ನಿರ್ಣಯ ತೆಗೆದುಕೊಳ್ಳುವುದು ಸುಪ್ರೀಂಕೋರ್ಟ್ ನಿರ್ದೇಶನಕ್ಕೆ ವಿರುದ್ಧವಾಗಿದೆ. ಆದ್ದರಿಂದ ಆರೋಪಿ ವಿದ್ಯಾರ್ಥಿನಿ ಪರ ವಕಾಲತ್ತು ಹಾಕಬಾರದು ಎಂದು ನಿರ್ಣಯ ತೆಗೆದುಕೊಂಡಿದ್ದರೆ, ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಮೈಸೂರು ಜಿಲ್ಲಾ ವಕೀಲರ ಸಂಘಕ್ಕೆ ನಿರ್ದೇಶನ ನೀಡಿದ ನ್ಯಾಯಾಪೀಠ ವಿಚಾರಣೆಯನ್ನು ಜ.19ಕ್ಕೆ ಮುಂದೂಡಿತು. 

ಅರ್ಜಿದಾರ ವಕೀಲ ವಾದ ಮಂಡಿಸಿ, ಸಿಎಎ ಹಾಗೂ ಎನ್ಆರ್'ಸಿ ವಿರೋಧಿಸಿ ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ 2020ರ ಜ.8ರಂದು ನಡೆದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ್ ಭಿತ್ತಿಪತ್ರ ಪ್ರದರ್ಶಿಸಿದ ಸಂಬಂಧ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. 

ನಳಿನಿ ವಿರುದ್ಧ ಯಾರು ವಕಾಲತ್ತು ವಹಿಸಬಾರದು ಎಂದು ಜ.16ರಂದು ಮೈಸೂರು ಜಿಲ್ಲಾ ವಕೀಲರ ಸಂಘ ನಿರ್ಣಯ ಕೈಗೊಂಡಿದೆ. ವಕಾಲತ್ತು ವಹಿಸಲು ಮುಂದಾದ ಕೆಲ ವಕೀಲರನ್ನು ಸಂಘದಿಂದ ಅಮಾನತ್ತುಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ವಕೀಲರ ಸಂಘದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ವಕೀಲರ ಪರಿಷತ್'ಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com